ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಸಿಎಂ ಎಂ. ಕೆ. ಸ್ಟಾಲಿನ್ ಸರಕಾರಕ್ಕೆ ಬಿಗ್ ಶಾಕ್ ಎದುರಾಗಿದ್ದು, ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್. ನೆಹರು ವಿರುದ್ಧ ಎಫ್ಐಆರ್ ದಾಖಲಿಸಲು ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.
ಪುರಸಭೆ ಆಡಳಿತ ಮತ್ತು ನೀರು ಸರಬರಾಜುಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಮೇಲೆ ನೆಹರು ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ನ್ಯಾಯಾಲಯವು ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯಕ್ಕೆ ಆದೇಶಿಸಿದೆ.
ವಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ದಾಖಲೆಗಳನ್ನು ಹೈಕೋರ್ಟ್ ಪರಿಶೀಲಿಸಿದ ನಂತರ ಈ ನಿರ್ದೇಶನ ಹೊರಡಿಸಲಾಗಿದೆ. 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 66(2) ರ ಅಡಿಯಲ್ಲಿ ಜಾರಿ ನಿರ್ದೇಶನಾಲಯವು ತನ್ನ ಸಂಶೋಧನೆಗಳನ್ನು ರಾಜ್ಯ ಅಧಿಕಾರಿಗಳೊಂದಿಗೆ ಹಂಚಿಕೊಂಡಿತ್ತು. ಮಾಹಿತಿಯು ಕೇವಲ ದೂರು ಮಾತ್ರವಲ್ಲ, ದಾಖಲೆ ಮತ್ತು ಡಿಜಿಟಲ್ ಸಾಕ್ಷ್ಯಾಧಾರಗಳ ವಿವರವಾದ ಮೂಲ ಮಾಹಿತಿ ಆಗಿದೆ ಎಂದು ಮದ್ರಾಸ್ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.
ನ್ಯಾಯಾಲಯಕ್ಕೆ ಸಲ್ಲಿಸಿದ ಇಡಿ ವರದಿಯ ಪ್ರಕಾರ, ಏಪ್ರಿಲ್ 2025ರಲ್ಲಿ ಸಚಿವರ ಸಹಚರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ನಡೆಸಿದ ಶೋಧದ ಸಮಯದಲ್ಲಿ ವಾಟ್ಸಾಪ್ ಚಾಟ್ಗಳು, ಛಾಯಾಚಿತ್ರಗಳು, ವರ್ಗಾವಣೆ ಆದೇಶಗಳು ಮತ್ತು ಹಣಕಾಸಿನ ದಾಖಲೆಗಳು ಸೇರಿದಂತೆ ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಎಂಎಡಬ್ಲ್ಯೂಎಸ್ ಇಲಾಖೆಯಲ್ಲಿ ವರ್ಗಾವಣೆ ಮತ್ತು ಹುದ್ದೆಗಳಿಗೆ ಬದಲಾಗಿ ಅಧಿಕಾರಿಗಳು ಮತ್ತು ಎಂಜಿನಿಯರ್ಗಳಿಂದ 7 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ಲಂಚ ಸಂಗ್ರಹಿಸಲಾಗಿದೆ ಎಂದು ಇಡಿ ಆರೋಪಿಸಿದೆ.365.87 ಕೋಟಿ ರೂ. ಮೌಲ್ಯದ ಹಣ ವರ್ಗಾವಣೆಯ ನೇರ ಪುರಾವೆಗಳನ್ನು ಸಂಸ್ಥೆ ಪಡೆದುಕೊಂಡಿದೆ.
ಇದನ್ನು ಪರಿಶೀಲಿಸಿದ ಕೋರ್ಟ್, ಸಾಕ್ಷ್ಯಗಳನ್ನು ಕಾನೂನುಬದ್ಧ ಸಂಸ್ಥೆ ಒದಗಿಸಿದಾಗ, ಪೊಲೀಸರು ಅದನ್ನು ಪ್ರಾಥಮಿಕ ತನಿಖೆಯ ವಿಷಯವಾಗಿ ಪರಿಗಣಿಸಿ ಎಫ್ಐಆರ್ ದಾಖಲಿಸುವುದನ್ನು ವಿಳಂಬಗೊಳಿಸಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಸ್ಪಷ್ಟಪಡಿಸಿದೆ. ಔಪಚಾರಿಕವಾಗಿ ಪ್ರಕರಣವನ್ನು ನೋಂದಾಯಿಸಿಕೊಳ್ಳಬೇಕು ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಇತರ ಅನ್ವಯವಾಗುವ ಕಾನೂನುಗಳ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ.



