ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರೆಂಬ ಆರೋಪದಡಿ ಪಾಕಿಸ್ತಾನದ ಐಎಸ್ಐ ಸಂಪರ್ಕ ಹೊಂದಿರುವ ಎಂಟು ಮಂದಿಯನ್ನು ಭದ್ರತಾ ಸಂಸ್ಥೆಗಳು ಬಂಧಿಸಿವೆ. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ ಆರು ಶಂಕಿತರನ್ನು ವಶಕ್ಕೆ ಪಡೆದಿದ್ದು, ಇನ್ನಿಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.
ಬಂಧಿತರಲ್ಲಿ ಒಬ್ಬರು ಬಾಂಗ್ಲಾದೇಶ ಮೂಲದ ವ್ಯಕ್ತಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಸೇರಿದಂತೆ ಶಂಕಿತರು ನಕಲಿ ಆಧಾರ್ ಕಾರ್ಡ್ಗಳನ್ನು ಬಳಸಿ ಗುರುತಿನ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ:
ಬಂಧಿತರಿಂದ ಎಂಟು ಮೊಬೈಲ್ಗಳು ಹಾಗೂ 16 ಸಿಮ್ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಪ್ತಚರ ಮಾಹಿತಿ ಆಧಾರವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಈ ಬಂಧನ ನಡೆದಿದೆ.
ಪಾಕಿಸ್ತಾನ ಆಧಾರಿತ ಲಷ್ಕರ್-ಎ-ತೊಯ್ಬಾ ಸಂಘಟನೆ ದೆಹಲಿಯ ಕೆಂಪುಕೋಟೆ ಮತ್ತು ಚಾಂದನಿ ಚೌಕ್ ಪ್ರದೇಶ ಸೇರಿದಂತೆ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಗುರಿಯಾಗಿಸಬಹುದೆಂಬ ಎಚ್ಚರಿಕೆಯ ಹಿನ್ನೆಲೆ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ.



