ಹೊಸದಿಗಂತ ಬೆಳಗಾವಿ:
ಇಲ್ಲಿನ ಸಗಟು ತರಕಾರಿ ಮಾರುಕಟ್ಟೆಯ ಘನತೆಯನ್ನು ಎತ್ತಿಹಿಡಿಯುವ ಜವಾಬ್ದಾರಿ ವರ್ತಕರ ಮೇಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಿವಿಮಾತು ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಪಿಎಂಸಿ ಮತ್ತು ‘ಜೈ ಕಿಸಾನ್’ ಖಾಸಗಿ ಮಾರುಕಟ್ಟೆ ವರ್ತಕರ ನಡುವಿನ ವಿವಾದಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಈ ಜಟಿಲ ಸಮಸ್ಯೆಗೆ ಶೀಘ್ರವೇ ಬೆಂಗಳೂರಿನಲ್ಲಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರ ಸಮ್ಮುಖದಲ್ಲಿ ಅಂತಿಮ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಖಾಸಗಿ ಮಾರುಕಟ್ಟೆಯಿಂದ ಎಪಿಎಂಸಿಗೆ ಮರಳಿದ ವರ್ತಕರಿಗೆ ತಕ್ಷಣವೇ ಖಾಲಿ ಇರುವ ಮಳಿಗೆಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರೈತರ ಅನುಕೂಲಕ್ಕಾಗಿ ಎಪಿಎಂಸಿ ವ್ಯಾಪ್ತಿಯಲ್ಲೇ ಮತ್ತೊಂದು ಪೂರಕ ಮಾರುಕಟ್ಟೆ ಸ್ಥಾಪಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ಸಚಿವರು ತಿಳಿಸಿದರು.
“ನಾವು ಯಾರ ಪರವೂ ಅಲ್ಲ, ಯಾರ ವಿರುದ್ಧವೂ ಅಲ್ಲ; ನಮ್ಮ ಗುರಿ ಮಾರುಕಟ್ಟೆಯ ಅಭಿವೃದ್ಧಿ ಮಾತ್ರ” ಎಂದು ಸ್ಪಷ್ಟಪಡಿಸಿದರು.
ಈ ವಿವಾದವು ರಾತ್ರೋರಾತ್ರಿ ಬಗೆಹರಿಯುವಂತದ್ದಲ್ಲ, ಆದ್ದರಿಂದ ಎರಡೂ ಕಡೆಯ ವರ್ತಕರು ಸೌಹಾರ್ದತೆಯಿಂದ ವ್ಯಾಪಾರ ಮುಂದುವರಿಸಬೇಕು ಎಂದು ಅವರು ಮನವಿ ಮಾಡಿದರು.
ಈ ಸಭೆಯಲ್ಲಿ ಶಾಸಕ ಆಸೀಫ್ ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.



