ಹೊಸದಿಗಂತ ಮಂಡ್ಯ:
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೈದ್ಯರೊಬ್ಬರು ನಗರದ ಪ್ರತಿಷ್ಠಿತ ಹರಿಪ್ರಿಯ ಹೋಟೆಲ್ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಕೆ.ಆರ್.ನಗರ ಮೂಲದ, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸುಖದೇವ್ (53) ಮೃತಪಟ್ಟ ದುರ್ದೈವಿ.
ವೈದ್ಯ ಸುಖದೇವ್ ಅವರು ಶುಕ್ರವಾರ ಮಂಡ್ಯದ ಹರಿಪ್ರಿಯ ಹೋಟೆಲ್ನಲ್ಲಿ ಕೊಠಡಿಯೊಂದನ್ನು ಬಾಡಿಗೆಗೆ ಪಡೆದಿದ್ದರು. ಪ್ರಾಥಮಿಕ ವರದಿಗಳ ಪ್ರಕಾರ, ಅವರು ಮದ್ಯ ಸೇವಿಸಿ ನಂತರ ಅತಿಯಾದ ಪ್ರಮಾಣದಲ್ಲಿ (ಸುಮಾರು 30) ಮಾತ್ರೆಗಳನ್ನು ಸೇವಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಹೋಟೆಲ್ ಸಿಬ್ಬಂದಿ ಕೊಠಡಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮೂಲಗಳ ಪ್ರಕಾರ, ಸುಖದೇವ್ ಅವರು ಕಳೆದ ಕೆಲವು ದಿನಗಳಿಂದ ಕೌಟುಂಬಿಕ ಕಲಹದಿಂದಾಗಿ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಪಶ್ಚಿಮ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.



