ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನಿಂದ ಜನರು ತತ್ತರಿಸಿರುವ ನಡುವೆ ಹವಾಮಾನ ಇಲಾಖೆ ಸ್ವಲ್ಪ ನಿರಾಳ ಸುದ್ದಿ ನೀಡಿದೆ. ಬಂಗಾಳಕೊಲ್ಲಿಯ ಮೇಲ್ಭಾಗದಲ್ಲಿ ಗಾಳಿಯ ಒತ್ತಡ ಹೆಚ್ಚಾಗಿರುವ ಪರಿಣಾಮ ಕರ್ನಾಟಕದ ಹಲವೆಡೆ ಇಂದು ರಾತ್ರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಕಾಸರಗೋಡು ಭಾಗಗಳಲ್ಲಿ ತಾಪಮಾನ ಹೆಚ್ಚಾಗಿದ್ದರೂ ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಸುಳ್ಯ, ಧರ್ಮಸ್ಥಳ, ಬೆಳ್ತಂಗಡಿ ಮತ್ತು ಕಾರ್ಕಳ ಸುತ್ತಮುತ್ತ ಪ್ರದೇಶಗಳಲ್ಲಿ ಸುಮಾರು 60 ಶೇಕಡಾ ಮಳೆಯ ಸಾಧ್ಯತೆ ಇರುವುದಾಗಿ ಹೇಳಲಾಗಿದೆ.
ಇದನ್ನೂ ಓದಿ:
ಕೊಡಗು ಗಡಿ ಭಾಗಗಳು, ವಯನಾಡು ಹಾಗೂ ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಕೂಡ ಗುಡುಗು ಸಹಿತ ಮಳೆಯಾಗಬಹುದು. ಶೃಂಗೇರಿ, ಕುದುರೆಮುಖ ಹಾಗೂ ಚಾರ್ಮಾಡಿ ಘಾಟ್ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ವೇಳೆ ಗಾಳಿ ಮಳೆ ಸಾಧ್ಯತೆ ಇದೆ. ಮುಂದಿನ ವಾರದೊಳಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ.



