ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯದಲ್ಲಿ ಅಗತ್ಯ ಪ್ರಮಾಣದಲ್ಲಿ ವಿದ್ಯುತ್ ಪರಿವರ್ತಕಗಳು ಲಭ್ಯವಿಲ್ಲದ ಕಾರಣ ಹೆಚ್ಚುವರಿಯಾಗಿ ಕೇರಳದಿಂದ ಖರೀದಿ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ವಿಧಾನಪರಿಷತ್ತಿನಲ್ಲಿಂದು ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಟೆಂಡರ್ ಮೂಲಕವೇ ಟ್ರಾನ್ಸ್ ಫಾರ್ಮರ್ ಗಳನ್ನು ಖರೀದಿ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಅಗತ್ಯ ಪ್ರಮಾಣದಲ್ಲಿ ಸರಬರಾಜು ಲಭ್ಯವಿಲ್ಲದ ಕಾರಣ ಕೇರಳದಿಂದ ಖರೀದಿ ಮಾಡಲಾಗುತ್ತಿದೆ ಎಂದರು.
ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದಲ್ಲಿ ಪ್ರಸ್ತುತ 15 ಸಾವಿರ ವಿದ್ಯುತ್ ಪರಿವರ್ತಕಗಳು ಉತ್ಪಾದನೆಯಾಗುತ್ತಿದ್ದು, ಈ ಸಂಖ್ಯೆಯನ್ನು 30 ಸಾವಿರಕ್ಕೆ ಹೆಚ್ಚಿಸಲಾಗಿದೆ. ರಾಜ್ಯಕ್ಕೆ ಸುಮಾರು 50 ಸಾವಿರ ಟ್ರಾನ್ಸ್ ಫಾರ್ಮರ್ ಗಳು ಅಗತ್ಯವಿದೆ. ಹೀಗಾಗಿ ಹೆಚ್ಚುವರಿ ಟ್ರಾನ್ಸ್ ಫಾರ್ಮರ್ ಗಳನ್ನು ಕೇರಳದಿಂದ ಖರೀದಿ ಮಾಡಲಾಗುತ್ತಿದೆ ಎಂದರು.
ಬೆಳಗಾವಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ಪೂರೈಕೆಯಾಗಿಲ್ಲ. ಅವಧಿ ಮುಗಿದ ಆಹಾರವನ್ನೂ ಸರಬರಾಜು ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಶೂನ್ಯವೇಳೆಯಲ್ಲಿ ಎಂ. ನಾಗರಾಜ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳಿಗೆ ಕಳಪೆ ಆಹಾರ ನೀಡಿರುವ ಕುರಿತು ಜಿಲ್ಲಾ ಉಪನಿರ್ದೇಶಕರು, ಸಿಡಿಪಿಒಗಳನ್ನು ಸ್ಥಳಕ್ಕೆ ಕಳುಹಿಸಿ, ವರದಿ ಪಡೆಯಲಾಗಿದೆ. ಯಾವುದೇ ಲೋಪಗಳು ಕಂಡು ಬಂದಿಲ್ಲ ಎಂದು ಹೇಳಿದರು.



