ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ 2026ರಲ್ಲಿ ಭಾರತ ತಂಡ ಚಾಂಪಿಯನ್ ಆಗಿದ್ದರೂ, ಟೂರ್ನಮೆಂಟ್ ಆಟಗಾರ ಪ್ರಶಸ್ತಿ ಕುರಿತು ಚರ್ಚೆ ಇನ್ನೂ ಮುಂದುವರಿಯುತ್ತಿದೆ. ಸಂಜು ಸ್ಯಾಮ್ಸನ್ ಅವರಿಗೆ ಈ ಗೌರವ ಸಿಕ್ಕಿದ್ದರೂ, ಜಸ್ಪ್ರೀತ್ ಬುಮ್ರಾ ಕೂಡ ಈ ಪ್ರಶಸ್ತಿಗೆ ಅರ್ಹರಾಗಿದ್ದರು ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತ ತಂಡವು ಫೈನಲ್ನಲ್ಲಿ ನ್ಯೂಜಿಲೆಂಡ್ ವಿರುದ್ಧ 96 ರನ್ಗಳಿಂದ ಭರ್ಜರಿ ಜಯ ಸಾಧಿಸಿ ಟ್ರೋಫಿ ಗೆದ್ದಿತ್ತು. ಈ ಟೂರ್ನಿಯಲ್ಲಿ ನಿರ್ಣಾಯಕ ಪಂದ್ಯಗಳಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ಸಂಜು ಸ್ಯಾಮ್ಸನ್ ಪ್ರಮುಖ ಪಾತ್ರವಹಿಸಿದ್ದರು. ಸತತ ಮೂರು ಪಂದ್ಯಗಳಲ್ಲಿ ಅರ್ಧಶತಕ ಬಾರಿಸಿದ್ದ ಅವರು ಟೂರ್ನಮೆಂಟ್ನ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು.
ಇದನ್ನೂ ಓದಿ:
ಈ ಬಗ್ಗೆ ಮಾತನಾಡಿದ ಎಬಿ ಡಿವಿಲಿಯರ್ಸ್, ಸಂಜು ಸ್ಯಾಮ್ಸನ್ ಮತ್ತು ಜಸ್ಪ್ರೀತ್ ಬುಮ್ರಾ ನಡುವೆ ಈ ಪ್ರಶಸ್ತಿಗಾಗಿ ಕಠಿಣ ಪೈಪೋಟಿ ಇತ್ತು ಎಂದು ಹೇಳಿದ್ದಾರೆ. ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಪಡೆದಿದ್ದ ಬುಮ್ರಾ ಕಠಿಣ ಸಂದರ್ಭಗಳಲ್ಲಿ ತಂಡಕ್ಕೆ ಮಹತ್ವದ ನೆರವು ನೀಡಿದ್ದರು ಎಂದು ಅವರು ತಿಳಿಸಿದ್ದಾರೆ.
ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಲ್ಲಿ ಬುಮ್ರಾ ಬೌಲಿಂಗ್ ಅತ್ಯಂತ ಪರಿಣಾಮಕಾರಿಯಾಗಿತ್ತು ಎಂದು ಎಬಿಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟೂರ್ನಿಯಲ್ಲಿ ಬುಮ್ರಾ ಒಟ್ಟು 8 ಪಂದ್ಯಗಳಲ್ಲಿ 14 ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದ್ದರು. ಫೈನಲ್ ಪಂದ್ಯದಲ್ಲಿ 15 ರನ್ ನೀಡಿ ನಾಲ್ಕು ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.



