ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲಾ ಮರಳು ಸಮಿತಿಯಿಂದ ಅಧಿಸೂಚನೆ ಹೊರಡಿಸಿ ಕಾರ್ಯಾದೇಶ ನೀಡಿರುವ ಮರಳು ನಿಕ್ಷೇಪ ಪ್ರದೇಶಗಳಿಂದ ಮರಳನ್ನು ತೆಗೆದು, ಸ್ಥಳೀಯ ಕಾಮಗಾರಿಗಳಿಗೆ ಗ್ರಾಮ ಪಂಚಾಯತಿಗಳ ಮೂಲಕ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿಧಾನಸಭೆಗೆ ತಿಳಿಸಿದ್ದಾರೆ.
ಸದಸ್ಯ ಹರೀಶ್ ಪೂಂಜ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಹೊಸದಾಗಿ ಏಳು ಮರಳು ನಿಕ್ಷೇಪಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಪೈಕಿ ಒಂದು ಮರಳು ನಿಕ್ಷೇಪ ಪ್ರದೇಶದಲ್ಲಿ ಮರಳು ತೆಗೆಯಲು ಸಂಬಂಧಪಟ್ಟ ಗ್ರಾಮ ಪಂಚಾಯತಿಗೆ ಈಗಾಗಲೇ ಕಾರ್ಯಾದೇಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಉಡುಪಿ ಜಿಲ್ಲೆಯಲ್ಲಿ 2020-21ನೇ ಸಾಲಿನಿಂದ 38 ಮರಳು ನಿಕ್ಷೇಪಗಳಲ್ಲಿ ಒಟ್ಟು 80,389 ಮೆಟ್ರಿಕ್ ಟನ್ ಮರಳಿನ ಪ್ರಮಾಣ ಲಭ್ಯವಿದ್ದು, ಇದುವರೆಗೂ 21,990 ಮೆಟ್ರಿಕ್ ಟನ್ ಮರಳನ್ನು ತೆಗೆದು ಪೂರೈಸಲಾಗಿದೆ ಎಂದು ಅವರು ಸದನಕ್ಕೆ ಮಾಹಿತಿ ನೀಡಿದರು.



