ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನಿಂದ ಜನರು ತತ್ತರಿಸಿರುವ ಸಂದರ್ಭದಲ್ಲೇ ಕೆಲ ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಸುರಿದು ತಂಪು ನೀಡಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಏಕಾಏಕಿ ಸುರಿದ ಮಳೆಯಿಂದ ಜನರಿಗೆ ಸ್ವಲ್ಪ ಮಟ್ಟಿನ ನಿರಾಳತೆ ಸಿಕ್ಕಿದೆ.
ಕೊಡಗು, ಚಿಕ್ಕಮಗಳೂರು ಹಾಗೂ ಬೆಳಗಾವಿ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸುರಿದಿದ್ದು, ವಾಹನ ಸವಾರರು ಕೆಲವು ಕಾಲ ಪರದಾಡಿದರು. ಕೊಡಗಿನ ಹಲವೆಡೆ ಸುರಿದ ಮಳೆ ಕಾಫಿ ಬೆಳೆಗಾರರಲ್ಲಿ ಸಂತೋಷ ಮೂಡಿಸಿದೆ.
ಇದನ್ನೂ ಓದಿ:
ಚಿಕ್ಕಮಗಳೂರು ಜಿಲ್ಲೆಯ ಹಲವಾರು ಭಾಗಗಳಲ್ಲಿ ಗಾಳಿಯೊಂದಿಗೆ ಮಳೆಯಾಗಿದ್ದು, ಕೆಲವು ಕಡೆ ಆಲಿಕಲ್ಲು ಮಳೆಯೂ ದಾಖಲಾಗಿದೆ. ಕಣತಿ ಗ್ರಾಮದ ಬಳಿ ಮಳೆಗೆ ಮರ ಧರೆಗುರುಳಿದ ಪರಿಣಾಮ ಚಿಕ್ಕಮಗಳೂರು–ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.
ಇನ್ನೊಂದೆಡೆ ಭಾರತೀಯ ಹವಾಮಾನ ಇಲಾಖೆ ನಾಳೆಯೂ ಕೆಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆಯ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಬಳ್ಳಾರಿ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬಿಸಿಲು ಮುಂದುವರಿಯಲಿದೆ.



