ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 30 ವರ್ಷದ ಗೃಹಿಣಿ ಲಕ್ಷ್ಮಿ ಮೃತಪಟ್ಟಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಯಾದಗಿರಿ ಮೂಲದ ಲಕ್ಷ್ಮಿ ಬೆಂಗಳೂರಿನ ಕಾಚೊಹಳ್ಳಿಯಲ್ಲಿ ವಾಸವಾಗಿದ್ದು, ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸುಮಾರು 8:30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಲಕ್ಷ್ಮಿ ಅವರು ತಮ್ಮ ಅನಾರೋಗ್ಯ ಪೀಡಿತ ಮಗನನ್ನು ಗೊಲ್ಲರಹಟ್ಟಿ ಬಳಿಯ ಆಸ್ಪತ್ರೆಗೆ ಕರೆದೊಯ್ದು ಮನೆಗೆ ಮರಳುತ್ತಿದ್ದರು.
ಗೊಲ್ಲರಹಟ್ಟಿ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಇವರಿಗೆ ಹಿಂದಿನಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಈಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ. ಬಿಎಂಟಿಸಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



