ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾಂಗ್ರೆಸ್ ಆಡಳಿತ ವೈಖರಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.
“ಪ್ರಿಯಾಂಕ್ ಖರ್ಗೆ ರಾಜಕೀಯವಾಗಿ ಇನ್ನೂ ಎಳಸು. ಕೇವಲ ತಮ್ಮ ತಂದೆಯವರ ಪ್ರಭಾವದಿಂದ ಅವರು ಮಂತ್ರಿಯಾಗಿದ್ದಾರೆ ಹೊರತು ಸ್ವಸಾಮರ್ಥ್ಯದಿಂದಲ್ಲ,” ಎಂದು ಲೇವಡಿ ಮಾಡಿದರು. ಆರ್ಎಸ್ಎಸ್ ನಿಷೇಧಿಸುವ ಪ್ರಿಯಾಂಕ್ ಹೇಳಿಕೆಗೆ ತಿರುಗೇಟು ನೀಡಿದ ಅವರು, “ಇಂದಿರಾ ಗಾಂಧಿ ಮತ್ತು ನೆಹರೂ ಅವರ ಕಾಲದಲ್ಲೇ ಆರ್ಎಸ್ಎಸ್ ನಿಷೇಧಿಸಲು ಸಾಧ್ಯವಾಗಲಿಲ್ಲ, ಇನ್ನು ಇವರಿಂದ ಸಾಧ್ಯವೇ?” ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ಕೇವಲ ಮುಸ್ಲಿಂ ಸಮುದಾಯದ ಪರವಾಗಿ ನಿಂತಿದೆ ಎಂದು ಆರೋಪಿಸಿದ ಈಶ್ವರಪ್ಪ, “ಸರ್ಕಾರಕ್ಕೆ ಹಿಂದುಳಿದವರು ಮತ್ತು ದಲಿತರ ನೆನಪೇ ಆಗುತ್ತಿಲ್ಲವೇ? ಬಜೆಟ್ನಲ್ಲಿ ಮುಸ್ಲಿಮರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನ ಘೋಷಣೆ ಮಾಡಿರುವುದು ಇದಕ್ಕೆ ಸಾಕ್ಷಿ,” ಎಂದರು. ಬಾಗಲಕೋಟೆಯಲ್ಲಿ ಎಸ್ಪಿಯವರ ಮೇಲೆಯೇ ಕಲ್ಲು ತೂರಾಟ ನಡೆದಿದೆ ಎಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದು ತಿಳಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



