ಹೊಸದಿಗಂತ ಡಿಜಿಟಲ್ ಡೆಸ್ಕ್:
2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವರು ಸದನದಲ್ಲಿ ಶುಭ ಹಾರೈಸಿದರು.
ಈ ಬಾರಿ ಒಟ್ಟು 8,65,968 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಕುರಿತು ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ವಿದ್ಯಾರ್ಥಿಗಳು ಯಾವುದೇ ಆತಂಕ ಅಥವಾ ಭಯವಿಲ್ಲದೆ ಪರೀಕ್ಷೆಯನ್ನು ಎದುರಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ತಂದಿರುವ ಸುಧಾರಣೆಗಳಿಂದಾಗಿ ಈಗ ಮೂರು ಹಂತಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಒಂದು ವೇಳೆ ಮೊದಲ ಹಂತದಲ್ಲಿ ಫಲಿತಾಂಶ ನಿರೀಕ್ಷಿತ ಮಟ್ಟದಲ್ಲಿಲ್ಲದಿದ್ದರೂ, ಮುಂದಿನ ಹಂತಗಳಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿದೆ. ಹಾಗಾಗಿ ಧೈರ್ಯವಾಗಿ ಪರೀಕ್ಷೆ ಬರೆಯಿರಿ,” ಎಂದು ಮಕ್ಕಳಿಗೆ ಬೆನ್ನುತಟ್ಟಿದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, “ಹಿಂದೆ ಮಕ್ಕಳು ಪರೀಕ್ಷೆ ಎಂದರೆ ತುಂಬಾ ಒತ್ತಡಕ್ಕೆ ಒಳಗಾಗುತ್ತಿದ್ದರು. ಆದರೆ ನಮ್ಮ ಸರ್ಕಾರ ಜಾರಿಗೆ ತಂದಿರುವ ಹೊಸ ಸುಧಾರಣೆಗಳು ವಿದ್ಯಾರ್ಥಿಗಳ ಮೇಲಿನ ಹೊರೆ ತಗ್ಗಿಸಿವೆ. ಮೂರು ಪರೀಕ್ಷೆಗಳ ಅವಕಾಶ ಇರುವುದರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷಾ ಕೊಠಡಿಗೆ ಬರಬೇಕು,” ಎಂದು ಹಾರೈಸಿದರು.



