ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಕಾಂಗ್ರೆಸ್ ಪಕ್ಷವು ಟಿಕೆಟ್ ಘೋಷಣೆಯನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ಕುರಿತು ವ್ಯಾಪಕ ಚರ್ಚೆಗಳು ನಡೆದಿದ್ದು, ಕಾರ್ಯಕರ್ತರ ಅಭಿಪ್ರಾಯಗಳಿಗೂ ಮಹತ್ವ ನೀಡಲಾಗಿದೆ ಎಂದರು. ಶುಕ್ರವಾರ ತಡರಾತ್ರಿವರೆಗೂ ಸಭೆ ನಡೆಸಿ ಎಲ್ಲಾ ಅಂಶಗಳನ್ನು ಪರಿಗಣಿಸಲಾಗಿದೆ ಟಿಕೆಟ್ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಒಳಗೆ ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:
ಇನ್ನೊಂದೆಡೆ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಪ್ರತಿಕ್ರಿಯಿಸಿ, ಆಕಾಂಕ್ಷಿಗಳು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದರು. ವೀಕ್ಷಕರು ಕ್ಷೇತ್ರ ಮಟ್ಟದಲ್ಲಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದ್ದಾರೆ ಎಂದು ಹೇಳಿದರು.
ಎರಡೂ ಕ್ಷೇತ್ರಗಳಲ್ಲಿ ಜಯ ಸಾಧಿಸುವ ಗುರಿಯಿಂದ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿಯನ್ನೇ ಆಯ್ಕೆ ಮಾಡುವುದಾಗಿ ಪಕ್ಷ ತಿಳಿಸಿದೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ.
ಒಟ್ಟಾರೆ, ಅಭ್ಯರ್ಥಿಗಳ ಘೋಷಣೆಗೆ ಕಾಯುತ್ತಿರುವ ಕಾರ್ಯಕರ್ತರಲ್ಲಿ ಕುತೂಹಲ ಹೆಚ್ಚಾಗಿದೆ.



