September 17, 2026
Thursday, September 17, 2026
spot_img

ನಿದ್ದೆಗೆಡಿಸಿದ್ದ ಹುಲಿ ಕೊನೆಗೂ ಅರಣ್ಯ ಇಲಾಖೆ ವಶಕ್ಕೆ ನಿಟ್ಟುಸಿರು ಬಿಟ್ಟ ಬೇರಂಬಾಡಿ ಗ್ರಾಮ ಜನತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:


ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡು ತೀವ್ರ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಅರಣ್ಯ ಇಲಾಖೆಯು ಭರ್ಜರಿ ಕಾರ್ಯಾಚರಣೆಯ ಮೂಲಕ ಇಂದು ಸೆರೆಹಿಡಿದಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವನ್ಯಜೀವಿ ವಲಯದ ಸಿಬ್ಬಂದಿಯು ಸಾಕಾನೆಗಳ ಸಹಾಯದೊಂದಿಗೆ ಈ ಕಾರ್ಯಾಚರಣೆ ನಡೆಸಿದ್ದು, ಆಧುನಿಕ ಡ್ರೋಣ್ ಕ್ಯಾಮೆರಾಗಳ ಮೂಲಕ ಹುಲಿಯ ಚಲನವಲನದ ಮೇಲೆ ತೀವ್ರ ನಿಗಾ ವಹಿಸಲಾಗಿತ್ತು.
ಅಂತಿಮವಾಗಿ ಅರಣ್ಯ ಅಧಿಕಾರಿಗಳು ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡುವ ಮೂಲಕ ಅದನ್ನು ಯಶಸ್ವಿಯಾಗಿ ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಗ್ರಾಮದ ಸುತ್ತಮುತ್ತಲ ಪ್ರದೇಶಗಳಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿಯ ಹಾವಳಿಯಿಂದಾಗಿ ರೈತರು ಮತ್ತು ಸ್ಥಳೀಯರು ಮನೆಯಿಂದ ಹೊರಬರಲು ಭಯಪಡುವಂತಾಗಿತ್ತು. ಈಗ ಅರಣ್ಯ ಇಲಾಖೆಯ ಸಕಾಲಿಕ ಕಾರ್ಯಾಚರಣೆಯಿಂದಾಗಿ ಹುಲಿ ಸೆರೆಯಾಗಿರುವುದು ಈ ಭಾಗದ ಜನರಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿದೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಅರಣ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಸೆರೆಹಿಡಿದ ಹುಲಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !