ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಮಾಜದ ವಿಚಾರಗಳಲ್ಲಿ ನಿರಂತರವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವ ನಟ ಕಿಶೋರ್ ಕುಮಾರ್ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ.
ತಮ್ಮ ಫೇಸ್ಬುಕ್ ಖಾತೆಯಲ್ಲಿ ಅವರು ದೇಶದ ಏಕತೆ ವಿಚಾರವನ್ನು ಪ್ರಶ್ನಿಸಿದ್ದಾರೆ. ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, “ಒಂದು ರಾಷ್ಟ್ರ ಎಂಬ ಮಾತು ಹೇಳುವ ಮೊದಲು ಜನರನ್ನು ಒಡೆಯುವ ರಾಜಕೀಯ ನಿಲ್ಲಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮ್ಮನ್ನು ದ್ವೇಷದ ವಿಷ ಕಾರಿ, ಹಿಂದೂ ಮುಸ್ಲಿಂ ಕ್ರಿಶ್ಚಿಯನ್ನರೆಂದು ಇನ್ನೆಂದೂ ಒಂದಾಗಲು ಸಾಧ್ಯವೇ ಇಲ್ಲದಂತೆ ಒಡೆದ ನಂತರ? ಒಟ್ಟಿಗೆ ಒಂದು ರಾಷ್ಟ್ರದಂತೆ ಮಾಡಲು ಸಾಧ್ಯವೇ? ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ? ಇಲ್ಲ! ನಾವು ಭಾರತದ ಜನ ತಯಾರಿಲ್ಲ…ನಿಮ್ಮ ರಾಜಿ, ಶರಣಾಗತಿಯಿಂದಾಗಿ ನಾವು ಇನ್ನೂ ಎಷ್ಟು ಸವಾಲುಗಳನ್ನು ಎದುರಿಸಬೇಕು? ನಿಮ್ಮ ತಪ್ಪುಗಳು, ರಹಸ್ಯಗಳನ್ನು ಮುಚ್ಚಿಡಲು ನಾವಿನ್ನೆಷ್ಟು ಬೆಲೆ ತೆರಬೇಕು? ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:
ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ನೇರ ಟೀಕೆ ನಡೆಸಿದ ಕಿಶೋರ್, ಸರ್ಕಾರದ ನಿರ್ಧಾರಗಳು ಜನರೊಂದಿಗೆ ಚರ್ಚಿಸದೆ ತೆಗೆದುಕೊಳ್ಳಲಾಗುತ್ತಿವೆ ಎಂದು ಹೇಳಿದರು. “ನಮ್ಮ ಪರವಾಗಿ ನಿರ್ಧಾರ ಕೈಗೊಳ್ಳುವ ಮೊದಲು ಜನರ ಅಭಿಪ್ರಾಯ ಕೇಳಲಾಗಿದೆಯೇ?” ಎಂದು ಪ್ರಶ್ನಿಸಿದ್ದಾರೆ.
ಇನ್ನು ಹಲವು ರಾಷ್ಟ್ರೀಯ ವಿಚಾರಗಳನ್ನು ಉಲ್ಲೇಖಿಸಿದ ಅವರು, ಆರ್ಥಿಕ ಮತ್ತು ಭದ್ರತಾ ನೀತಿಗಳಿಂದ ಹಿಡಿದು ಸಾಮಾಜಿಕ ವಿಷಯಗಳವರೆಗೆ ಸರ್ಕಾರದ ಕ್ರಮಗಳನ್ನು ಟೀಕಿಸಿದ್ದಾರೆ. ಕೆಲ ನಿರ್ಧಾರಗಳು ದೇಶದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ, ಕಿಶೋರ್ ಅವರ ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.



