ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ತೈಲ ಬಿಕ್ಕಟ್ಟು ತಲೆದೋರಿದೆ ಎಂಬ ಸುದ್ದಿಯ ಬೆನ್ನಲ್ಲೇ, “ಮತ್ತೆ ಲಾಕ್ಡೌನ್ ಜಾರಿಯಾಗಲಿದೆ” ಎಂಬ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ಈ ಗೊಂದಲಗಳಿಗೆ ಈಗ ಕೇಂದ್ರ ಸರ್ಕಾರ ತೆರೆ ಎಳೆದಿದೆ.
ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್ ಮೂಲಕ ಪ್ರತಿಕ್ರಿಯಿಸಿ, “ಭಾರತದಲ್ಲಿ ಲಾಕ್ಡೌನ್ ಜಾರಿಯಾಗುತ್ತದೆ ಎಂಬುದೆಲ್ಲಾ ಕೇವಲ ಸುಳ್ಳು ಸುದ್ದಿ. ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾವನೆ ಇಲ್ಲ” ಎಂದು ಖಡಕ್ ಆಗಿ ಹೇಳಿದ್ದಾರೆ. ಜಾಗತಿಕವಾಗಿ ತೈಲ ಮಾರುಕಟ್ಟೆಯಲ್ಲಿ ಏರುಪೇರಾಗುತ್ತಿರುವುದು ನಿಜ, ಆದರೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಯಾವುದೇ ಸವಾಲನ್ನು ಎದುರಿಸಲು ಸರ್ಕಾರ ಸಿದ್ಧವಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಇನ್ನೊಂದೆಡೆ, ಕೈಗಾರಿಕೆಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಕೇಂದ್ರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಜ್ಯ ಸರ್ಕಾರಗಳ ಮನವಿಯ ಮೇರೆಗೆ ಕಮರ್ಷಿಯಲ್ ಗ್ಯಾಸ್ ಪೂರೈಕೆಯನ್ನು ಶೇ. 20 ರಷ್ಟು ಹೆಚ್ಚಿಸಿದೆ. ಇದರಿಂದಾಗಿ ಈವರೆಗಿನ ಪೂರೈಕೆಯ ಮಿತಿ ಶೇ. 50 ರಿಂದ ಶೇ. 70 ಕ್ಕೆ ಏರಿಕೆಯಾಗಲಿದ್ದು, ಜವಳಿ ಮತ್ತು ಉತ್ಪಾದನಾ ವಲಯದ ಕೈಗಾರಿಕೆಗಳಿಗೆ ದೊಡ್ಡ ಮಟ್ಟದ ನೆಮ್ಮದಿ ಸಿಗಲಿದೆ.



