ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಿಗ್ಗೆ ದೊಡ್ಡ ಮಟ್ಟದ ವಿಮಾನ ಅವಘಡವೊಂದು ತಪ್ಪಿದೆ.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ದೆಹಲಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಬೆಳಿಗ್ಗೆ 10:50ರ ಸುಮಾರಿಗೆ ಪೈಲಟ್ ಎಂಜಿನ್ ಸಮಸ್ಯೆಯನ್ನು ಪತ್ತೆಹಚ್ಚಿದ ಕೂಡಲೇ ತುರ್ತು ಸಂದೇಶ ರವಾನಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ರನ್ವೇ 28ರಲ್ಲಿ ತುರ್ತು ಪರಿಸ್ಥಿತಿ ಘೋಷಿಸಿ, ವಿಮಾನ ಇಳಿಯಲು ಅನುವು ಮಾಡಿಕೊಟ್ಟರು.
ವಿಮಾನದಲ್ಲಿದ್ದ ಎಲ್ಲಾ 161 ಪ್ರಯಾಣಿಕರು ಹಾಗೂ ಸಿಬ್ಬಂದಿ ವರ್ಗದವರು ಸುರಕ್ಷಿತವಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಎಂದು ಖಚಿತಪಡಿಸಿದ್ದಾರೆ.



