ಹೊಸದಿಗಂತ ವರದಿ, ಮಂಡ್ಯ :
ಐತಿಹಾಸಿಕ ಶ್ರೀದೇವಿ, ಭೂದೇವಿಯವರೊಂದಿಗೆ ಗರುಡಾರೂಢನಾದ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡೀ ಉತ್ಸವ ಶನಿವಾರ ಮೇಲುಕೋಟೆಯ ರಾಜಬೀದಿಯಲ್ಲಿ ಸಹಸ್ರಾರು ಮಂದಿ ಭಕ್ತರ ಗೋವಿಂದನಾಮ ಹರ್ಷೋದ್ಘಾರದ ನಡುವೆ ವಿಜೃಂಭಣೆಯಿಂದ ನೆರವೇರಿತು.
ಸಾಕ್ಷಾತ್ ಶ್ರೀಮನ್ನಾರಾಯಣನ ಕಿರೀಟ ಎಂದೇ ನಂಬಿರುವ ವೈರಮುಡಿ ಕಿರೀಟವನ್ನು ಗರುಡಾರೂಢನಾದ ಚೆಲುವನಾರಾಯಣನ ಮುಡಿಗೆ ಅಲಂಕರಿಸಲಾಗಿತ್ತು. ಶ್ರೀದೇವಿ, ಭೂದೇವಿಯವರೊಂದಿಗೆ ಗರುಡಾರೂಢನಾಗಿ ಸ್ವಾಮಿ ಭಕ್ತರಿಗೆ ದರುಶನ ನೀಡಿದರು. ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸ್ವಾಮಿಗೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ರಾತ್ರಿ ಯಾಗಶಾಲೆ ಮತ್ತು ಗರುಡದೇವನ ಮೆರವಣಿಗೆಯ ನಂತರ ಮಹಾಮಂಗಳಾರತಿಯ ಪ್ರಾರ್ಥನೆ ಸಲ್ಲಿಸಿದ ಬಳಿಕ ರಾತ್ರಿ 8.40ಕ್ಕೆ ವೈರಮುಡಿ ಉತ್ಸವ ಆರಂಭವಾಯಿತು.

ದೇವಾಲಯದ ಎಡಭಾಗದಲ್ಲಿ ನಿರ್ಮಿಸಲಾಗಿರುವ ಮಂಟಪದಲ್ಲಿ ಸ್ವಾಮಿಗೆ ಮತ್ತೊಮ್ಮೆ ಮಂಗಳಾರತಿ ಮಾಡಲಾಯಿತು. ನಂತರ ಮೇಲುಕೋಟೆಯ ಚತುರ್ವೀದಿಗಳಲ್ಲಿ ವೈರಮುಡಿ ಉತ್ಸವ ಸಂಭ್ರಮದಿಂದ ನೆರವೇರಿತು.



