ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಫಿನಾಡಿನಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಚಿಕ್ಕಮಗಳೂರು ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ ಬಳಿ ಬೈಕ್ ಸವಾರನೊಬ್ಬ ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಗುಡ್ಡೆಕೊಪ್ಪ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಸವಾರನಿಗೆ ಒಮ್ಮಿಂದೊಮ್ಮೆಲೇ ಕಾಡಾನೆ ಎದುರಾಗಿದೆ. ಆನೆಯನ್ನು ಕಂಡ ಕೂಡಲೇ ಗಾಬರಿಗೊಂಡ ಸವಾರ ಸಮಯಪ್ರಜ್ಞೆ ಮೆರೆದು ಬೈಕ್ ಅನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾನೆ. ಇದರಿಂದ ಕೆರಳಿದ ಕಾಡಾನೆಯು ಬೈಕ್ ಅನ್ನು ತುಳಿದು ಜಖಂಗೊಳಿಸಿದ್ದು, ವಾಹನದ ಮುಂಭಾಗ ಸಂಪೂರ್ಣ ಪುಡಿಪುಡಿಯಾಗಿದೆ. ಸವಾರ ಸ್ಥಳದಿಂದ ಓಡಿಹೋಗದಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು.
ಕಳೆದ ಒಂದು ವರ್ಷದಲ್ಲಿ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ ಬರೊಬ್ಬರಿ 9 ಜನರು ಕಾಡಾನೆ ದಾಳಿಗೆ ಬಲಿಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಸಮಸ್ಯೆಯ ವಿರುದ್ಧ ಹೋರಾಟ ನಡೆಸಿದ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿರುವ ಪೊಲೀಸರ ಕ್ರಮಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.



