ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯ ವಲಯದಲ್ಲಿ ವಾಗ್ದಾಳಿಗಳು ಜೋರಾಗಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ರಾಜ್ಯ ಬಿಜೆಪಿ ನಿಯೋಗವು ಈಗ ಕೇಂದ್ರ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಶಾಸಕ ಸಿ.ಕೆ. ರಾಮಮೂರ್ತಿ ನೇತೃತ್ವದ ತಂಡವು ಪ್ರದೀಪ್ ಈಶ್ವರ್ ಮತ್ತು ಸರ್ಕಾರಿ ನೌಕರರಾಗಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ ಶಿಕ್ಷಕ ಚಂದ್ರಶೇಖರ್ ನುಗ್ಲಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ಬಿಜೆಪಿ ಮುಖಂಡರ ಬಗ್ಗೆ ಸಂವಿಧಾನ ವಿರೋಧಿ ಹಾಗೂ ಅವಹೇಳನಕಾರಿ ಮಾತುಗಳನ್ನಾಡಿರುವ ಪ್ರದೀಪ್ ಈಶ್ವರ್ ವಿರುದ್ಧ ಶಾಸಕ ಸಿ.ಕೆ. ರಾಮಮೂರ್ತಿ ಆಕ್ರೋಶ ಹೊರಹಾಕಿದ್ದಾರೆ. “ಶಾಸಕರಾಗಿ ಪ್ರದೀಪ್ ಈಶ್ವರ್ ಅವರು ಘನತೆ ಮರೆತು ಮಾತನಾಡುತ್ತಿದ್ದಾರೆ, ಅವರೊಬ್ಬ ಹುಚ್ಚ. ಅವರ ವಿರುದ್ಧ ಕಾನೂನು ಕ್ರಮ ಅನಿವಾರ್ಯ,” ಎಂದು ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬಾಗಲಕೋಟೆಯಲ್ಲಿ ನಡೆದ ಪ್ರಚಾರದ ವಿಚಾರವನ್ನೂ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಅವರು ಸರ್ಕಾರಿ ನೌಕರರಾಗಿದ್ದರೂ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬಹಿರಂಗ ಪ್ರಚಾರದಲ್ಲಿ ಪಾಲ್ಗೊಂಡಿರುವುದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಬಿಜೆಪಿ ದೂರಿದೆ.
ಬಿಜೆಪಿ ಮುಖಂಡ ಎಸ್. ಹರೀಶ್ ಮಾತನಾಡಿ, ಸರ್ಕಾರಿ ನೌಕರಿಯಲ್ಲಿದ್ದುಕೊಂಡು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡುತ್ತಿರುವ ಚಂದ್ರಶೇಖರ್ ನುಗ್ಲಿ ಅವರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.



