ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಅಡಿಕೆಗೆ ನಿಗದಿಪಡಿಸಿರುವ ತೇವಾಂಶದ ಮಿತಿಯನ್ನು ಸಡಿಲಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್ ಪಾಸ್ವಾನ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಆಹಾರ ಸುರಕ್ಷತಾ ಮಾನದಂಡದ ಅಡಿಯಲ್ಲಿ ಅಡಿಕೆಯಲ್ಲಿರಬೇಕಾದ ಗರಿಷ್ಠ ತೇವಾಂಶದ ಪ್ರಮಾಣವನ್ನು ಶೇಕಡ 7ಕ್ಕೆ ನಿಗದಿಪಡಿಸಿರುವುದು ರಾಜ್ಯದ ಅಡಿಕೆ ಬೆಳೆಗಾರರಿಗೆ ತೀವ್ರ ಸಂಕಷ್ಟ ತಂದೊಡ್ಡಿದೆ ಎಂದು ಅವರು ವಿವರಿಸಿದರು. ಕರಾವಳಿಯಂತಹ ಅತಿ ಹೆಚ್ಚು ಆರ್ದ್ರತೆ ಇರುವ ಪ್ರದೇಶಗಳಲ್ಲಿ ಅಡಿಕೆಯನ್ನು ಪ್ರಮುಖವಾಗಿ ಬಿಸಿಲಿನಲ್ಲಿ ಒಣಗಿಸಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಶೇಕಡ 7ರಷ್ಟು ತೇವಾಂಶದ ಮಿತಿಯನ್ನು ಕಾಯ್ದುಕೊಳ್ಳುವುದು ಪ್ರಾಯೋಗಿಕವಾಗಿ ಅಸಾಧ್ಯವಾಗಿದ್ದು, ಇದು ಬೆಳೆಗಾರರನ್ನು ಅಡಕತ್ತರಿಯಲ್ಲಿ ಸಿಲುಕಿಸುವಂತೆ ಮಾಡಿದೆ ಎಂದು ಅವರು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಈ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ತೇವಾಂಶದ ಮಿತಿಯನ್ನು ಸಡಿಲಿಸಿ ವೈಜ್ಞಾನಿಕ ಮಾನದಂಡಗಳನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.



