ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ಶಿರಾ ಬೈಪಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಸುಮಾರು 20 ಮಂದಿಗೆ ಗಾಯಗಳಾಗಿವೆ.
ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಈ ಡಿಕ್ಕಿಯಿಂದ ಕೆಲಕಾಲ ಹೆದ್ದಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್, ಇದೇ ದಿಕ್ಕಿನಲ್ಲಿ ಸಾಗುತ್ತಿದ್ದ ಖಾಸಗಿ ಬಸ್ ಅನ್ನು ಓವರ್ಟೇಕ್ ಮಾಡಲು ಮುಂದಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಹಿಂಬದಿಯಿಂದ ಖಾಸಗಿ ಬಸ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:
ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಕೆಎಸ್ಆರ್ಟಿಸಿ ಬಸ್ನ 12 ಮಂದಿ ಹಾಗೂ ಖಾಸಗಿ ಬಸ್ನ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ತುಮಕೂರು ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ನಡೆದಿದ್ದು, ಮಾಹಿತಿ ತಡವಾಗಿ ಹೊರಬಂದಿದೆ. ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.



