ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ವದಂತಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟ ಉತ್ತರ ನೀಡಿದ್ದಾರೆ.
ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಈ ಬಗ್ಗೆ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದು, ಸರ್ಕಾರದ ಅವಧಿ 2028ರವರೆಗೆ ಇದೆ. ಈ ಹಿನ್ನೆಲೆಯಲ್ಲಿ ಪೂರ್ಣ ಐದು ವರ್ಷಗಳ ಅವಧಿಯನ್ನು ಅವರು ಪೂರ್ಣಗೊಳಿಸುವ ಸಾಧ್ಯತೆಯೇ ಹೆಚ್ಚು ಎಂದು ಪರಮೇಶ್ವರ್ ಹೇಳಿದ್ದಾರೆ.
ಹೈಕಮಾಂಡ್ ಪ್ರತ್ಯೇಕವಾಗಿ ಸ್ಪಷ್ಟೀಕರಣ ನೀಡಬೇಕಾದ ಅಗತ್ಯವಿಲ್ಲ. ಪಕ್ಷದ ತೀರ್ಮಾನವೇ ಅಂತಿಮ ಎಂದು ಅವರು ಒತ್ತಿ ಹೇಳಿದರು.
ಇದನ್ನೂ ಓದಿ:
ಸಿಎಂ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳಿಗೆ ಪ್ರತಿಕ್ರಿಯಿಸಿದ ಅವರು, ಯಾರು ಏನೇ ಹೇಳಿದರೂ ಅದು ವೈಯಕ್ತಿಕ ಅಭಿಪ್ರಾಯ ಮಾತ್ರ. ಮುಖ್ಯಮಂತ್ರಿ ಸ್ಥಾನದಲ್ಲಿ ಯಾವುದೇ ಬದಲಾವಣೆ ಮಾಡುವ ಅಧಿಕಾರ ಪಕ್ಷದ ಹೈಕಮಾಂಡ್ಗೆ ಮಾತ್ರ ಇದೆ. ಅದುವರೆಗೆ ಇಂತಹ ಹೇಳಿಕೆಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂದರು.
ಉಪಚುನಾವಣೆ ಫಲಿತಾಂಶವನ್ನು ಸರ್ಕಾರದ ಕಾರ್ಯಕ್ಷಮತೆಯ ಅಳೆಯುವ ಮಾನದಂಡವಾಗಿ ನೋಡಬಾರದು ಎಂದೂ ಅವರು ಹೇಳಿದರು. ಉಪಚುನಾವಣೆಯ ಫಲಿತಾಂಶ ಸರ್ಕಾರಕ್ಕೆ ಕೊಡುವ ಮಾರ್ಕ್ಸ್ ಅಲ್ಲ. ಅದು ರಾಜ್ಯ ರಾಜಕೀಯದ ದಿಕ್ಕನ್ನು ತೋರಿಸುವ ದಿಕ್ಸೂಚಿಯೂ ಅಲ್ಲ. ಆ ಫಲಿತಾಂಶದ ಆಧಾರದ ಮೇಲೆ ಯಾವುದೇ ರಾಜಕೀಯ ಬದಲಾವಣೆ ಆಗುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.



