ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರನ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಆತಂಕ ಮೂಡಿಸಿದೆ.
ಹುಣಸನಹಳ್ಳಿ ಗ್ರಾಮದ 28 ವರ್ಷದ ಪವನ್ ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಪವನ್ ಕೋಟ್ಯಂತರ ರೂಪಾಯಿ ಮೌಲ್ಯದ ವಿದ್ಯುತ್ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದ ಗುತ್ತಿಗೆದಾರರಾಗಿದ್ದರು. ಏಪ್ರಿಲ್ 2ರಂದು ಕೆಲಸದ ಸ್ಥಳಕ್ಕೆ ಹೋಗುತ್ತೇನೆ ಎಂದು ಮನೆಯಿಂದ ಹೊರಟ ಅವರು ಬಳಿಕ ಮನೆಗೆ ಮರಳಿರಲಿಲ್ಲ. ನಂತರ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಸಾಮಾಜಿಕ ಜಾಲತಾಣ ಖಾತೆಗಳೂ ನಿಷ್ಕ್ರಿಯಗೊಂಡಿದ್ದವು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ:
ಕುಟುಂಬದವರು ಹಾಗೂ ಸ್ನೇಹಿತರು ಹಲವು ಕಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಲಾಗಿತ್ತು. ಸೋಮವಾರ ಅವರ ಮೃತದೇಹ ಕಾವೇರಿ ನದಿಯಲ್ಲಿ ತೇಲುತ್ತಿರುವುದು ಪತ್ತೆಯಾಗಿ, ಪೊಲೀಸರು ಶವವನ್ನು ಹೊರತೆಗೆದಿದ್ದಾರೆ.
ಈ ಸಾವಿನ ಕುರಿತು ಕುಟುಂಬಸ್ಥರು ತೀವ್ರ ಅನುಮಾನ ವ್ಯಕ್ತಪಡಿಸಿದ್ದಾರೆ. ಪವನ್ ಅವರನ್ನು ಕೊಲೆ ಮಾಡಿ ಬಳಿಕ ನದಿಗೆ ಎಸೆದಿರಬಹುದು ಎಂದು ಅವರು ಆರೋಪಿಸಿದ್ದಾರೆ.



