ಹೊಸದಿಗಂತ ವರದಿ ಬೆಳಗಾವಿ:
ಏಪ್ರಿಲ್ ನಿಂದ ರಾಜ್ಯದಲ್ಲಿ, ಬೇಸಿಗೆ ಆರಂಭಗೊಂಡಿರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಪ್ರಾರಂಭವಾಗಿದ್ದು, ಕುಡಿಯುವ ನೀರಿನ ಪರಿಹಾರದ ಬಗ್ಗೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಸಮೀಪದ ಖಾಸಗಿ ಬೋರವೆಲ್ಗಳ ಸಹಾಯದಿಂದ ನೀರು ಸರಬರಾಜು ಮಾಡಲು ಮೈಕ್ರೋ ಪ್ಲಾನ್ ರೂಪಿಸುವಂತೆ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು ಬೆಳಗಾವಿ ವಿಭಾಗದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬೆಳಗಾವಿ ವಿಭಾಗಿಯ ಜಿಲ್ಲಾಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಏಪ್ರಿಲ್ 4 ರಂದು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಆಯಾ ಗ್ರಾಮಗಳಲ್ಲಿ ಗ್ರಾಮ ಪಂ ವ್ಯಾಪ್ತಿಯಲ್ಲಿ ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಹಾಗೂ ಪ್ರಕೃತಿ ವಿಕೋಪ ನಿರ್ವಹಣೆಯಡಿ ಪ್ರತಿ ವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸುವಂತೆ ಆದೇಶಿಸಿದರು.
ಇದನ್ನೂ ಓದಿ:
ಅದರ ಜೊತೆಗೆ ಜನಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ಗ್ರಾಮೀಣ ಭಾಗದಂತೆ ನಗರ ಪ್ರದೇಶಗಳಲ್ಲಿಯೂ ವಿಡಿಯೋ ಪ್ರದರ್ಶನಗಳ ಮೂಲಕ ಜಾಗೃತಿ ಮೂಡಿಸಬೇಕು. Self Enumeration ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದ್ದು, ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ಇ-ಪೌತಿ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಸರಳೀಕರಿಸಲಾಗಿದ್ದು, ಅದರ ಪ್ರಗತಿಯನ್ನು ವೇಗಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಸರ್ಕಾರಿ ಜಮೀನುಗಳ ನಿರ್ವಹಣೆಯಲ್ಲಿ ಗುತ್ತಿಗೆ ನೀಡಿರುವ ಜಮೀನುಗಳ ಪರಿಶೀಲನೆ ನಡೆಸಿ, ಅವುಗಳನ್ನು ಸರಿಯಾಗಿ ವರ್ಗೀಕರಿಸಿ ಪ್ಲಾಗ್ ಮಾಡುವಂತೆ ಸೂಚಿಸಿದರು.
ಬೆಳಗಾವಿ ವಿಭಾಗದಲ್ಲಿ ಬಾಕಿ ಇರುವ ಸರ್ಕಾರಿ ಜಮೀನು ಮತ್ತು ಕೆರೆಗಳ ಒತ್ತುವರಿಯನ್ನು ತ್ವರಿತವಾಗಿ ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದಲ್ಲದೆ, ಗ್ರಾಮಾಡಳಿತಾಧಿಕಾರಿ ಮತ್ತು ಗ್ರಾಮ ಪಂಚಾಯತಿಗಳ ಟ್ಯಾಗಿಂಗ್ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರಲ್ಲದೇ ಬಾಕಿ ಇರುವ ಕಂದಾಯ ನ್ಯಾಯಾಲಯ ಪ್ರಕರಣಗಳನ್ನು ಕೂಡಲೇ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.



