ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಎಂಕೆ–ಕಾಂಗ್ರೆಸ್ ಮೈತ್ರಿ ಪರ ಪ್ರಚಾರ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚೆನ್ನೈನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಮೈತ್ರಿಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸ್ಪಷ್ಟಪಡಿಸಿದರು.
ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ತಾವು ಕರ್ನಾಟಕ ಸರ್ಕಾರದ ಪ್ರತಿನಿಧಿಯಾಗಿ ಅಲ್ಲ, ಪಕ್ಷದ ರಾಷ್ಟ್ರೀಯ ನಾಯಕರ ಪರವಾಗಿ ಬಂದಿರುವುದಾಗಿ ಹೇಳಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ಶುಭಾಶಯ ಸಂದೇಶವನ್ನು ಸಭೆಯಲ್ಲಿ ಹಂಚಿಕೊಂಡು, ಮೈತ್ರಿ ಅಭ್ಯರ್ಥಿಗಳ ಗೆಲುವಿಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಡಿಎಂಕೆ ಮತ್ತು ಕಾಂಗ್ರೆಸ್ ಈಗಾಗಲೇ ಚುನಾವಣಾ ಮೈತ್ರಿಯಲ್ಲಿ ಸ್ಥಾನ ಹಂಚಿಕೆ ಅಂತಿಮಗೊಳಿಸಿರುವುದು ಗಮನಾರ್ಹ.
ಇದನ್ನೂ ಓದಿ:
ಡಿ.ಕೆ. ಶಿವಕುಮಾರ್ ರಾಜಕೀಯವನ್ನು ಕೃಷಿಗೆ ಹೋಲಿಸಿ ಮಾತನಾಡಿದ್ದು ವಿಶೇಷ ಗಮನ ಸೆಳೆಯಿತು. ರಾಜಕೀಯದಲ್ಲಿ ತಕ್ಷಣದ ಯಶಸ್ಸು ಸಿಗುವುದಿಲ್ಲ. ಬೀಜ ಬಿತ್ತಿದಂತೆ ತಾಳ್ಮೆ, ಪರಿಶ್ರಮ ಮತ್ತು ನೆಲಮಟ್ಟದ ಕೆಲಸ ಅಗತ್ಯ ಎಂದು ಅವರು ಹೇಳಿದ್ದಾರೆ. ಸಿನಿಮಾ ಕ್ಷೇತ್ರದಿಂದ ರಾಜಕೀಯಕ್ಕೆ ಬರುವವರ ಬಗ್ಗೆ ಪರೋಕ್ಷ ಟೀಕೆ ಮಾಡುತ್ತಾ, ಜನಸೇವೆಗಾಗಿ ದೀರ್ಘಕಾಲದ ಬದ್ಧತೆ ಬೇಕು ಎಂದು ಹೇಳಿದರು.
ಇದೇ ವೇಳೆ, ಬಿಜೆಪಿ ರಾಜ್ಯವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ, ಸ್ಟಾಲಿನ್ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು. ತಮಿಳುನಾಡು ಚುನಾವಣಾ ಕಣ ದಿನೇದಿನೇ ರಂಗೇರುತ್ತಿದ್ದು, ಮೈತ್ರಿ ಪಕ್ಷಗಳ ಪ್ರಚಾರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.



