ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಸಿಲು ಮಳೆ ಚಳಿ ಲೆಕ್ಕಿಸದೇ ಕೆಲಸ ಮಾಡುವ ಸಂಚಾರ ಪೊಲೀಸ್ ಸಿಬ್ಬಂದಿ ಕೆಲಸ ಮಾಡುವ ಜಾಗದಲ್ಲಿ ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಅವರು ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಬಿಸಿಲು ಹೆಚ್ಚಾಗಿದೆ. ಪೊಲೀಸರ ಆರೋಗ್ಯ ಹಾಳಾಗದಂತೆ ಏನಾದರೂ ವ್ಯವಸ್ಥೆ ಮಾಡಬೇಕಿದೆ. ಪೊಲೀಸರು ನಿಲ್ಲುವ ಜಾಗದಲ್ಲಿ ತಾತ್ಕಾಲಿಕ ನೆರಳು, ಮಾಸ್ಕ್ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ನೀಡಿ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ ಎಂ.ಎ. ಸಲೀಂ ಅವರಿಗೆ ಪತ್ರ ಬರೆಯಲಾಗಿದೆ.
ರಾಜ್ಯದಲ್ಲಿ ಬೇಸಿಗೆ ಆರಂಭವಾಗಿದ್ದು, ವರ್ಷದಿಂದ ವರ್ಷಕ್ಕೆ ತಾಪಮಾನ ಹೆಚ್ಚಾಗುತ್ತಿದೆ. ಸರ್ಕಾರದ ಇತರ ಎಲ್ಲಾ ಇಲಾಖೆಗಳಿಗಿಂತ ಪೊಲೀಸ್ ಇಲಾಖೆಯು ವಿಭಿನ್ನವಾಗಿದ್ದು ತುರ್ತುಸೇವೆಯಾಗಿರುವುದರಿಂದ ದಿನದ 24 ಗಂಟೆಗಳ ಕಾಲ ಸನ್ನದ್ಧರಾಗಿ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ. ಪ್ರಸ್ತುತ ಐದು ಕೋಟಿಗೂ ಅಧಿಕ ಜನಸಂಖ್ಯೆ ವಾಸಿಸುವ ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದ್ದು, ವಾಹನಗಳಿಂದ ಹೊರಸೂಸುವ ಹೊಗೆ, ವಿವಿಧ ಇಲಾಖೆಗಳಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಂದ ಬೃಹತ್ ಮಟ್ಟದ ಮಣ್ಣಿನ ಧೂಳು ಬೆಂಗಳೂರು ನಗರದಲ್ಲಿದೆ. ಈ ಎಲ್ಲದರಿಂದ ಪೊಲೀಸರ ರಕ್ಷಣೆ ಮಾಡಬೇಕೆಂದು ಬರೆದಿದ್ದಾರೆ.



