ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಿಯಾಬಾದ್ನ ಶಾಲಿಮಾರ್ ಗಾರ್ಡನ್ ನಲ್ಲಿ ನಾಲ್ಕು ವರ್ಷದ ಬಾಲಕಿಯ ಶವ ನಿಲ್ಲಿಸಿದ್ದ ಕಾರಿನ ಕೆಳಗೆ ಪತ್ತೆಯಾಗಿದ್ದು, ಪ್ರಕರಣವು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ಅನುಮಾನ ಈಗ ಕುಟುಂಬದ ವ್ಯಕ್ತಿಯ ಮೇಲೆಯೇ ಕೇಂದ್ರೀಕೃತವಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಏಪ್ರಿಲ್ 11ರ ರಾತ್ರಿ ಸುಮಾರು 8 ಗಂಟೆ ಸುಮಾರಿಗೆ 80 ಅಡಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಕೆಳಗೆ ಬಾಲಕಿಯ ಮೃತದೇಹ ಪತ್ತೆಯಾಯಿತು. ಪೆಟ್ರೋಲಿಂಗ್ ವೇಳೆ ಪೊಲೀಸರು ಶವವನ್ನು ಗಮನಿಸಿ ತಕ್ಷಣ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದರು. ತನಿಖೆ ಮುಂದುವರಿದಂತೆ ಬಾಲಕಿಯ ಚಿಕ್ಕಪ್ಪ ಜಮೀಲ್ ಅಲಿಯಾಸ್ ಛೋಟು ಮೇಲೆ ಗಂಭೀರ ಅನುಮಾನ ಮೂಡಿದೆ.
ಇದನ್ನೂ ಓದಿ:
ಮಗು ಮನೆಯಲ್ಲೇ ಒಂಟಿಯಾಗಿದ್ದ ಸಮಯದಲ್ಲಿ ಆರೋಪಿಯು ಆಕೆಯನ್ನು ತನ್ನ ಕೋಣೆಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಅಪರಾಧವನ್ನು ಮರೆಮಾಚುವ ಉದ್ದೇಶದಿಂದ ಶವವನ್ನು ಕಾರಿನ ಕೆಳಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಕುತ್ತಿಗೆ ಮತ್ತು ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದ್ದು, ಹತ್ಯೆಗೆ ಮೊದಲು ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹಲವು ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.



