ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಗುವು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ನಡೆದಿದೆ.
ಮಂಗೇರಾಮ್ ಪಾರ್ಕ್ ಸಮೀಪದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದಲ್ಲಿದ್ದ ತಾತ್ಕಾಲಿಕ ಗುಡಿಸಲುಗಳಿಗೆ ವೇಗವಾಗಿ ವ್ಯಾಪಿಸಿ ಈ ಅವಘಡಕ್ಕೆ ಕಾರಣವಾಗಿದೆ.
ಮಾಹಿತಿ ಪ್ರಕಾರ, ಬೆಳಗಿನ ಜಾವ ಸುಮಾರು 1.25ರ ಸುಮಾರಿಗೆ ಬುಧ್ ವಿಹಾರ್ ಬಳಿಯ ತ್ಯಾಜ್ಯ ಸಂಗ್ರಹಣಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿ ಇದ್ದ ಕಾರಣ ಜ್ವಾಲೆಗಳು ಕ್ಷಣಾರ್ಧದಲ್ಲಿ ಹರಡಿ ಗುಡಿಸಲುಗಳನ್ನು ಆವರಿಸಿವೆ. ಆ ವೇಳೆ ಕಾರ್ಮಿಕರ ಕುಟುಂಬಗಳು ನಿದ್ರೆಯಲ್ಲಿದ್ದುದರಿಂದ ಹೊರಬರಲು ಸಾಧ್ಯವಾಗಿಲ್ಲ.
ಇದನ್ನೂ ಓದಿ:
ಸುದ್ದಿ ತಿಳಿಯುತ್ತಿದ್ದಂತೆಯೇ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಆದರೆ ಕಿರಿದಾದ ರಸ್ತೆಗಳ ಕಾರಣದಿಂದ ಕಾರ್ಯಾಚರಣೆಗೆ ಕೆಲಕಾಲ ತೊಂದರೆ ಉಂಟಾಯಿತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ದುರದೃಷ್ಟವಶಾತ್ ಅವಶೇಷಗಳಡಿಯಿಂದ ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಸ್ಥಳೀಯ ಪೊಲೀಸರು ಮತ್ತು ವಿಪತ್ತು ನಿರ್ವಹಣಾ ತಂಡಗಳು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.



