ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಮೀಸಲಾತಿ ಮಸೂದೆಯ ವಿಚಾರದಲ್ಲಿ ವಿರೋಧ ಪಕ್ಷಗಳ ನಡವಳಿಕೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರವಾಗಿ ಖಂಡಿಸಿದ್ದಾರೆ. ಸಂಸತ್ತಿನಲ್ಲಿ 131ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಚರ್ಚೆಯ ವೇಳೆ ನಡೆದ ಬೆಳವಣಿಗೆಗಳನ್ನು ಮಹಾಭಾರತದ ದ್ರೌಪದಿಯ ವಸ್ತ್ರಾಪಹರಣದ ಘಟನೆಗೆ ಹೋಲಿಸಿ ಅವರು ‘ಇಂಡಿಯಾ’ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕ್ಷೇತ್ರಗಳ ಪುನರ್ವಿಂಗಡಣೆಯ ನಂತರ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಸರ್ಕಾರದ ಪ್ರಯತ್ನಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್, ಎಸ್ಪಿ, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ವಿರುದ್ಧ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಸಂಸತ್ತಿನಲ್ಲಿ ಈ ಪಕ್ಷಗಳು ನಡೆದುಕೊಂಡ ರೀತಿ ಅತ್ಯಂತ ಬೇಜವಾಬ್ದಾರಿಯುತವಾಗಿತ್ತು. ಇದು ಮಹಿಳಾ ಕುಲಕ್ಕೆ ಮಾಡಿದ ಅವಮಾನ,” ಎಂದು ಅವರು ಕಿಡಿಕಾರಿದರು.
ವಿಶೇಷವಾಗಿ ಸಮಾಜವಾದಿ ಪಕ್ಷವು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ಬೇಕೆಂದು ಆಗ್ರಹಿಸಿರುವುದನ್ನು ಟೀಕಿಸಿದ ಅವರು, “ಒಂದೆಡೆ ಸಂವಿಧಾನವನ್ನು ಪೂಜಿಸುವ ನಾಟಕವಾಡುವ ವಿಪಕ್ಷಗಳು, ಇನ್ನೊಂದೆಡೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಮಹಿಳಾ ಸಬಲೀಕರಣದ ಮಸೂದೆಯಲ್ಲಿ ಅಪ್ರಸ್ತುತ ವಿಷಯಗಳನ್ನು ತಂದು ಅಡ್ಡಿಪಡಿಸಲಾಗುತ್ತಿದೆ,” ಎಂದು ಕುಟುಕಿದರು.
ಈ ಮಸೂದೆಯು ಮಹಿಳೆಯರಿಗೆ ಆಡಳಿತದಲ್ಲಿ ಸಮಾನ ಪಾಲು ನೀಡುವ ಪ್ರಗತಿಪರ ಹೆಜ್ಜೆಯಾಗಿದ್ದು, ಇದು ಯಾರ ಹಕ್ಕುಗಳನ್ನೂ ಕಸಿದುಕೊಳ್ಳುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಸ್ಪಷ್ಟಪಡಿಸಿದರು.



