ಹೊಸದಿಗಂತ ಕಲಬುರಗಿ:
ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅಂಗವಾಗಿ ನಗರದ ಜಗತ್ ವೃತ್ತದಲ್ಲಿನ ಬಸವೇಶ್ವರರ ಪುತ್ಥಳಿಗೆ ನಗರದ ಪ್ರತಿಷ್ಠಿತ ಎಸ್ ಬಿ ಪಾಟೀಲ್ ಗ್ರೂಪ್ ಸಮೂಹದಿಂದ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಟಿ ಮಾಡಲಾಯಿತು.
ಬಸವ ಜಯಂತಿ ಉತ್ಸವ ಸಮಿತಿ, ಜಿಲ್ಲಾಡಳಿತದಿಂದ ಬೆಳಿಗ್ಗೆ ಷಟಸ್ಥಲ ಧ್ವಜಾರೋಹಣ ಹಾಗೂ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಬಳಿಕ, ಸಾವಿರಾರು ಬಸವಾಭಿಮಾನಿಗಳ ಸಮ್ಮುಖದಲ್ಲಿ ಆಕಾಶದಿಂದ ಹೆಲಿಕಾಪ್ಟರ್ ಮೂಲಕ ಪುಷ್ಪ ವೃಷ್ಟಿ ಮಾಡುತ್ತಿದ್ದಂತೆ ಜಗಜ್ಯೋತಿ ಬಸವೇಶ್ವರರ ಮಹಾರಾಜ ಕೀ ಜೈ ಎಂಬ ಘೋಷಣೆಗಳು ಮೊಳಗಿದವು.
ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವಡಾ.ಶರಣಪ್ರಕಾಶ ಪಾಟೀಲ,ಬಸವ ಜಯಂತಿ ಸಮಿತಿ ಅಧ್ಯಕ್ಷ,ಶಾಸಕ ಬಿ.ಆರ್.ಪಾಟೀಲ, ಕಾರ್ಯಾಧ್ಯಕ್ಷ , ಶಾಸಕ ಬಿ.ಜಿ.ಪಾಟೀಲ್, ಅಲ್ಲಮಪ್ರಭು ಪಾಟೀಲ, ಶಶೀಲ್ ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ್,ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶರಣಕುಮಾರ್ ಮೋದಿ ಸೇರಿದಂತೆ ಹಲವರು ಭಾಗವಹಿಸಿದ್ದರು .ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನಮ್, ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ,ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ ಆಲದ್ ಕಟ್ಟ ಸೇರಿದಂತೆ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಎಲ್ಲ ಗಣ್ಯರು ಶ್ರೀ ಜಗಜ್ಯೋತಿ ಬಸವೇಶ್ವರ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.



