August 25, 2026
Tuesday, August 25, 2026
spot_img

ಖರ್ಗೆ ಮಾತಿನಲ್ಲಿ ಹತಾಶೆ ಸ್ಪಷ್ಟವಾಗಿದೆ: ಸಚಿವ ಪ್ರಲ್ಹಾದ್ ಜೋಶಿ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆ, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಚೆನ್ನೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಡಿದ ಉಲ್ಲೇಖ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಖರ್ಗೆ ಅವರ ಮಾತಿನಲ್ಲಿ ಹತಾಶೆ ಸ್ಪಷ್ಟವಾಗಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಈಗಾಗಲೇ ಸೋಲನ್ನು ಒಪ್ಪಿಕೊಂಡಂತೆ ವರ್ತಿಸುತ್ತಿದ್ದು, ಪ್ರಧಾನಿ ಬಗ್ಗೆ ಇಂತಹ ಹೇಳಿಕೆ ನೀಡುವುದು ಅಸಭ್ಯ ರಾಜಕೀಯ ಎಂದು ಹೇಳಿದ್ದಾರೆ. ಖರ್ಗೆ ಅವರು ದೇಶದ ಜನತೆ ಮತ್ತು ಪ್ರಧಾನಿಯವರಲ್ಲಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:

ಇನ್ನೊಂದೆಡೆ, ಬಿಜೆಪಿ ನಾಯಕ ಅಮಿತ್ ಮಾಳವಿಯಾ ಕೂಡ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾರ್ವಜನಿಕ ಚರ್ಚೆಯನ್ನು ಕೆಳಮಟ್ಟಕ್ಕೆ ಇಳಿಸುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದ್ದು, ಇದು ಕಾಂಗ್ರೆಸ್ ಮನೋಭಾವವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ವಿವಾದ ಹೆಚ್ಚಾದ ಹಿನ್ನೆಲೆ ಖರ್ಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆಯುವ ಉದ್ದೇಶ ಇರಲಿಲ್ಲ ಎಂದು ಹೇಳಿದ ಅವರು, ತಮ್ಮ ಮಾತಿನ ಅರ್ಥವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ. ಕೇಂದ್ರ ಸಂಸ್ಥೆಗಳ ಬಳಕೆ ಮೂಲಕ ರಾಜಕೀಯ ಒತ್ತಡ ಸೃಷ್ಟಿಸಲಾಗುತ್ತಿದೆ ಎಂಬುದನ್ನು ಮಾತ್ರ ಸೂಚಿಸಿದ್ದಾಗಿ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !