ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ದಾಖಲಾಗಿರುವ ಭರ್ಜರಿ ಮತದಾನವು ರಾಜ್ಯದಲ್ಲಿನ ‘ಜಂಗಲ್ ರಾಜ್’ ಅಂತ್ಯಕ್ಕೆ ನಾಂದಿ ಹಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭವಿಷ್ಯ ನುಡಿದಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಮೇ 4ರ ಫಲಿತಾಂಶದ ನಂತರ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಿಎಂಸಿ ಸರ್ಕಾರವು ಮಹಿಳಾ ವಿರೋಧಿ ಧೋರಣೆ ಹೊಂದಿದೆ ಎಂದು ಟೀಕಿಸಿದ ಪ್ರಧಾನಿ, ರಾಜ್ಯದ ಮಹಿಳೆಯರು ಪ್ರಗತಿ ಸಾಧಿಸುವುದನ್ನು ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಬಯಸುತ್ತಿಲ್ಲ ಎಂದು ಆರೋಪಿಸಿದರು. “ಮಹಿಳೆಯರ ರಕ್ಷಣೆ ಮತ್ತು ಅವರ ಸಬಲೀಕರಣವೇ ಬಿಜೆಪಿಯ ಪ್ರಮುಖ ಆದ್ಯತೆ” ಎಂದು ಹೇಳುವ ಮೂಲಕ ಮಹಿಳಾ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಕೈಗೊಳ್ಳಲಿರುವ ಮೊದಲ ನಿರ್ಧಾರದ ಬಗ್ಗೆ ಮೋದಿ ಸುಳಿವು ನೀಡಿದ್ದಾರೆ.
ಬಿಜೆಪಿ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯ ಮೂಲಕ ಪ್ರತಿಯೊಬ್ಬ ಫಲಾನುಭವಿಗೆ 5 ಲಕ್ಷ ರೂ.ವರೆಗಿನ ಉಚಿತ ಚಿಕಿತ್ಸೆ ದೊರೆಯಲಿದೆ. ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎನ್ನುವುದೇ ಬಿಜೆಪಿಯ ಗುರಿ ಎಂದು ಅವರು ಸ್ಪಷ್ಟಪಡಿಸಿದರು.



