ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯ ವಿಸ್ತರಣೆಗೆ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲಿರುವ ಕಟ್ಟಡ ಎತ್ತರದ ನಿರ್ಬಂಧಗಳು ದೊಡ್ಡ ಅಡಚಣೆಯಾಗಿ ಪರಿಣಮಿಸಿವೆ. ಈ ಹಿನ್ನೆಲೆಯಲ್ಲಿ, ಸುರಕ್ಷತೆ ಮತ್ತು ಪ್ರಗತಿ ಎರಡನ್ನೂ ಸಮತೋಲನಗೊಳಿಸಿ ನಿಯಮಗಳನ್ನು ಸಡಿಲಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ವಿಶೇಷ ಮನವಿ ಸಲ್ಲಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್, ಬೆಂಗಳೂರಿನ ಎಚ್ಎಎಲ್ ನಂತಹ ರಕ್ಷಣಾ ಇಲಾಖೆಯ ಸುಪರ್ದಿಯಲ್ಲಿರುವ ವಿಮಾನ ನಿಲ್ದಾಣಗಳ ಸುತ್ತಮುತ್ತಲಿನ ನಿರ್ಮಾಣ ಕಾರ್ಯಗಳಿಗೆ ಎದುರಾಗುತ್ತಿರುವ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ 20 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರಾಕ್ಷೇಪಣಾ ಪತ್ರ ನೀಡುವಾಗ ಅಧಿಕಾರಿಗಳು ವಿಪರೀತ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸುತ್ತಿದ್ದಾರೆ. ಇದು ನಗರದ ಲಂಬಾಕಾರದ ಬೆಳವಣಿಗೆಗೆ ತಡೆಯೊಡ್ಡುತ್ತಿದೆ.
ಬೆಂಗಳೂರು ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ವಿಶೇಷವಾಗಿ ನಗರದ ಹೃದಯಭಾಗದಲ್ಲಿರುವ ಎಚ್ಎಎಲ್ ವಿಮಾನ ನಿಲ್ದಾಣದ ಸುತ್ತಮುತ್ತಲ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭಾರೀ ಬೇಡಿಕೆಯಿದೆ. ಆದರೆ ಎತ್ತರದ ನಿರ್ಬಂಧಗಳಿಂದಾಗಿ ಹೂಡಿಕೆದಾರರು ಮತ್ತು ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದಾರೆ.
ಈ ಕುರಿತು ಈಗಾಗಲೇ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ರಕ್ಷಣಾ ಉತ್ಪಾದನಾ ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ. ವಿಮಾನಗಳ ಹಾರಾಟದ ಸುರಕ್ಷತೆಯನ್ನು ಕಾಯ್ದುಕೊಳ್ಳುತ್ತಲೇ, ತಾಂತ್ರಿಕವಾಗಿ ಸಾಧ್ಯವಿರುವ ಕಡೆಗಳಲ್ಲಿ ಎತ್ತರದ ಮಿತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಗರದ ಆರ್ಥಿಕ ಪ್ರಗತಿ ಮತ್ತು ರಕ್ಷಣಾ ಸಚಿವಾಲಯದ ನಿಯಮಗಳ ನಡುವೆ ಸಮನ್ವಯ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ರಾಜನಾಥ್ ಸಿಂಗ್ ಅವರಿಗೆ ಸಲ್ಲಿಸಿದ ಪತ್ರದಲ್ಲಿ ಡಿ.ಕೆ. ಶಿವಕುಮಾರ್ ವಿವರಿಸಿದ್ದಾರೆ.



