ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಬಾರ್ ವಿಚಾರವೇ ದುರಂತಕ್ಕೆ ಕಾರಣವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ.
ಸಾಂಬಾರ್ ಮಾಡಿರಲಿಲ್ಲ ಎಂಬ ವಿಚಾರವಾಗಿ ತಂದೆ ಮಗಳ ನಡುವೆ ನಡೆದ ಮಾತಿನ ಚಕಮಕಿಯಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತಳನ್ನು ಸೌಜನ್ಯ ಪೂಜಾರಿ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ಕುಟುಂಬದ ಮಾಹಿತಿ ಪ್ರಕಾರ, ಶನಿವಾರ ಬೆಳಗ್ಗೆ ತಂದೆ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಹೇಳಿದ್ದರು. ಆದರೆ ಮಧ್ಯಾಹ್ನ ಊಟದ ವೇಳೆಗೆ ಸಾಂಬಾರ್ ಸಿದ್ಧವಾಗಿರಲಿಲ್ಲ. ಇದೇ ವಿಚಾರವಾಗಿ ತಂದೆ ಮಗಳನ್ನು ಪ್ರಶ್ನಿಸಿ ಬೈದಿದ್ದಾರೆ ಎನ್ನಲಾಗಿದೆ.
ಬಳಿಕ ತಂದೆ ಸಾಂಬಾರ್ ತರಲು ಪಕ್ಕದ ಮನೆಗೆ ತೆರಳಿದ್ದ ವೇಳೆ, ಮನೆಯಲ್ಲಿ ಒಬ್ಬಳೇ ಇದ್ದ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ತಕ್ಷಣ ಸ್ಥಳೀಯರು ಹಾಗೂ ಕುಟುಂಬಸ್ಥರು ನೆರವಿಗೆ ಧಾವಿಸಿದರೂ ಪ್ರಯೋಜನವಾಗಲಿಲ್ಲ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಗೋಣಿಬೀಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



