ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಮ್ ಆದ್ಮಿ ಪಕ್ಷದಿಂದ ಹೊರಬಂದ ಬಳಿಕ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಪಕ್ಷವು ತನ್ನ ಆರಂಭಿಕ ತತ್ವಗಳು ಮತ್ತು ಮೌಲ್ಯಗಳಿಂದ ದೂರ ಸರಿದಿದ್ದು, ಪ್ರಾಮಾಣಿಕವಾಗಿ ದುಡಿಯುವ ಕಾರ್ಯಕರ್ತರಿಗೆ ಅಲ್ಲಿ ಈಗ ಸ್ಥಾನವಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಡ್ಡಾ, ದೇಶಸೇವೆಯ ಉದ್ದೇಶದಿಂದ ಪಕ್ಷಕ್ಕೆ ಸೇರಿದ್ದ ಹಲವರು ಈಗ ನಿರಾಸೆಯಿಂದ ಹೊರಬರುತ್ತಿದ್ದಾರೆ ಎಂದರು. ಪಕ್ಷವನ್ನು ಕಟ್ಟಲು ಶ್ರಮಿಸಿದ ನಿಷ್ಠಾವಂತ ನಾಯಕರು ಮತ್ತು ಕಾರ್ಯಕರ್ತರು ತಮಗೆ ಬೇಕಾದ ವಾತಾವರಣ ಇಲ್ಲ ಎಂದು ಭಾವಿಸುತ್ತಿದ್ದು, ಇದೇ ಕಾರಣಕ್ಕೆ ಒಂದರ ಹಿಂದೆ ಒಂದರಂತೆ ಪಕ್ಷ ತೊರೆಯುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:
ಇದರ ಜೊತೆಗೆ, ಇನ್ನೂ ಹಲವು ಸಂಸದರು ಪಕ್ಷ ಬಿಡಲು ನಿರ್ಧರಿಸಿರುವುದಾಗಿ ಚಡ್ಡಾ ಸ್ಫೋಟಕ ಮಾಹಿತಿ ಹಂಚಿಕೊಂಡರು. ಇದು ವೈಯಕ್ತಿಕ ನಿರ್ಧಾರವಲ್ಲ, ಪಕ್ಷದ ಒಳಗಿನ ಬೆಳವಣಿಗೆಗಳ ಪರಿಣಾಮ ಎಂದು ಅವರು ಸ್ಪಷ್ಟಪಡಿಸಿದರು.
ಈ ಬೆಳವಣಿಗೆ ಆಮ್ ಆದ್ಮಿ ಪಕ್ಷದ ಒಳರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ನಾಯಕರು ಪಕ್ಷ ತೊರೆಯುವ ಸಾಧ್ಯತೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ.



