ಹೊಸದಿಗಂತ ಬೆಳಗಾವಿ:
ನಗರದ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮವಾಗಿ ಮುಂಬೈ-ಮಟಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಮಾರ್ಕೆಟ್ ಪೊಲೀಸ್ ಠಾಣೆಯ ಸಿಬ್ಬಂದಿ ಅನಿರೀಕ್ಷಿತ ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತರನ್ನು ಪ್ರಶಾಂತ ಭರಮಾ ಪಾಟೀಲ (29) ಮತ್ತು ಪ್ರತೀಕ ಮೋಹನ ಜಾಧವ (35) ಎಂದು ಗುರುತಿಸಲಾಗಿದೆ. ದಾಳಿಯ ವೇಳೆ ಪೊಲೀಸರು ಆರೋಪಿಗಳಿಂದ ಜೂಜಾಟಕ್ಕೆ ಬಳಸುತ್ತಿದ್ದ ಓಸಿ ಚೀಟಿಗಳು ಹಾಗೂ ಪಣಕ್ಕಿಟ್ಟಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರ ಪ್ರಾಥಮಿಕ ವಿಚಾರಣೆಯ ವೇಳೆ, ಈ ಆರೋಪಿಗಳು ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಗಜಾನನ ಶಶಿಕಾಂತ ಗರಡ ಎಂಬಾತನಿಗೆ ನೀಡುತ್ತಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಸದ್ಯ ಈ ಮೂವರೂ ಆರೋಪಿಗಳ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ಸಂಖ್ಯೆ 89/2026 ರಡಿ, ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 78(3) ಅನ್ವಯ ಮೊಕದ್ದಮೆ ಹೂಡಿದ್ದಾರೆ. ತಲೆಮರೆಸಿಕೊಂಡಿರುವ ಅಥವಾ ದಂಧೆಯ ಹಿಂದಿರುವ ಇತರರ ಪತ್ತೆಗಾಗಿ ತನಿಖೆಯನ್ನು ತೀವ್ರಗೊಳಿಸಲಾಗಿದೆ.



