ಹೊಸದಿಗಂತ ವರದಿ ಕಾರವಾರ:
ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಅಮೂಲ್ಯ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವವನ್ನು ಅಭೂತಪೂರ್ವವಾಗಿಸೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು.
ಮಾಜಿ ಮುಖ್ಯಮಂತ್ರಿ, ರೈತಬಂಧು ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9 ರಂದು ನಡೆಯಲಿರುವ ಯಡಿಯೂರಪ್ಪ ಅಭಿಮಾನೋತ್ಸವದ ಕುರಿತು ಹಳಿಯಾಳ, ಮುಂಡಗೋಡ ಹಾಗೂ ಯಲ್ಲಾಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬಿ ಎಸ್ ಯಡಿಯೂರಪ್ಪ ಈ ನಾಡಿನ ಒಂದು ಶಕ್ತಿ. ಪಕ್ಷಕ್ಕಾಗಿ ಅವಿರತವಾಗಿ ಅರ್ಧಶತಮಾನದಷ್ಟು ಕಾಲ ದುಡಿದ ಮಹಾನ್ ನಾಯಕರು. ರೈತರು, ಬಡವರು, ಮೀನುಗಾರರು, ಮಹಿಳೆಯರು, ದೀನ ದಲಿತರು ಹೀಗೆ ಎಲ್ಲ ವರ್ಗದವರ ಅಭಿವೃದ್ಧಿಗಾಗಿ ಜನಪರ ಯೋಜನೆಗಳನ್ನು ಕಾರ್ಯಕ್ರಮವನ್ನು ಜಾರಿಗೊಳಿಸಿದ್ದಾರೆ. ಅವರು ನಾಡಿಗಾಗಿ, ಪಕ್ಷಕ್ಕಾಗಿ ನೀಡಿದ ಕೊಡುಗೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9 ರಂದು ಯಡಿಯೂರಪ್ಪ ಅಭಿಮಾನೋತ್ಸವವನ್ನು ಏರ್ಪಡಿಸಲಾಗಿದೆ.
ಇದನ್ನೂ ಓದಿ:
ಈ ಕಾರ್ಯಕ್ರಮವನ್ನು ಐತಿಹಾಸಿಕವಾಗಿಸೋಣ. ನಮ್ಮ ಜಿಲ್ಲೆಯ ಪ್ರತಿಯೊಂದು ತಾಲೂಕಿನಿಂದಲೂ ಕಾರ್ಯಕರ್ತರು , ಅತಿ ಹೆಚ್ಚು ಜನರು ಸ್ವಇಚ್ಛೆಯಿಂದ ಪಾಲ್ಗೊಳ್ಳುವ ಮೂಲಕ ಸಮಾರಂಭಕ್ಕೆ ಮೆರುಗು ತರೋಣ ಎಂದು ಅವರು ಮನವಿ ಮಾಡಿದರು.
ಮಾಜಿ ಶಾಸಕ ಸುನೀಲ ಹೆಗಡೆ, ರಾಜ್ಯ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ, ಶ್ರೀಕಾಂತ ಘೋಟ್ನೇಕರ, ಮಂಗೇಶ ದೇಶಪಾಂಡೆ, ಶಿವಾಜಿ ನರ್ಸಾನಿ, ಎಲ್ ಟಿ ಪಾಟೀಲ್, ಅಶೋಕ ಛಲವಾದಿ, ಮಂಜುನಾಥ ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು.
ವಿಜಯೋತ್ಸವ :
ಪಶ್ಚಿಮ ಬಂಗಾಳ, ಆಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿ ಎ ಮೈತ್ರಿಕೂಟ ಅಭೂತಪೂರ್ವ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ ರೂಪಾಲಿ ನಾಯ್ಕ ನೇತೃತ್ವದಲ್ಲಿ
ವಿಜಯೋತ್ಸವದಲ್ಲಿ ನಡೆಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.



