May 7, 2026
Thursday, May 7, 2026
spot_img

ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡುವ ಸಂಕಲ್ಪ: ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಪ್ರವಾಸಿ ತಾಣಗಳು, ಸುಂದರ ಸಮುದ್ರ ತೀರಗಳು ಮತ್ತು ಪವಿತ್ರ ಯಾತ್ರಾ ಸ್ಥಳಗಳನ್ನು ಕಸಮುಕ್ತಗೊಳಿಸಲು ಸುಪ್ರೀಂ ಕೋರ್ಟ್ ಈಗ ದೊಡ್ಡ ಹೆಜ್ಜೆ ಇಟ್ಟಿದೆ. ದೇಶಾದ್ಯಂತ ‘ಘನತ್ಯಾಜ್ಯ ನಿರ್ವಹಣಾ ನಿಯಮಗಳು 2026’ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಕೇಂದ್ರ ಪರಿಸರ ಸಚಿವಾಲಯಕ್ಕೆ ಸೂಚನೆ ನೀಡಿರುವ ನ್ಯಾಯಾಲಯವು, ಮುಂದಿನ ಒಂದು ವರ್ಷದ ಅವಧಿಗೆ ಈ ನಿಯಮಗಳನ್ನು ಜಾರಿಗೊಳಿಸುವ ಸಂಪೂರ್ಣ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ (DC) ನೀಡುವಂತೆ ತಿಳಿಸಿದೆ. ಜಿಲ್ಲಾಧಿಕಾರಿಗಳು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ಒಳಗೊಂಡ ‘ವಿಶೇಷ ಸೆಲ್’ (Special Cell) ರಚಿಸಬೇಕು. ಈ ತಂಡವು ಪ್ರವಾಸಿ ತಾಣಗಳಲ್ಲಿನ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಿದ್ದು, ಪ್ರತಿ 15 ದಿನಗಳಿಗೊಮ್ಮೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ.

ಸ್ವಚ್ಛತೆ ಕಾಪಾಡುವಲ್ಲಿ ಯಶಸ್ವಿಯಾಗುವ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರಗಳು ಹೆಚ್ಚಿನ ಅನುದಾನ ನೀಡಬೇಕು ಎಂದು ಕೋರ್ಟ್ ಹೇಳಿದೆ. ಆದರೆ, ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗುವ ಅಥವಾ ನಿಯಮ ಉಲ್ಲಂಘಿಸುವ ಸಂಸ್ಥೆಗಳಿಗೆ ಭಾರಿ ದಂಡ ವಿಧಿಸುವಂತೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಎಸ್.ವಿ.ಎನ್. ಭಟ್ಟಿ ಅವರನ್ನೊಳಗೊಂಡ ಪೀಠವು ಈ ಮಹತ್ವದ ಆದೇಶ ನೀಡಿದೆ. “ನಮ್ಮ ದೇಶದ ಪ್ರವಾಸಿ ತಾಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಕೇವಲ ಸೌಂದರ್ಯದ ವಿಷಯವಲ್ಲ, ಇದು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರತಿಷ್ಠೆಯನ್ನು ಹೆಚ್ಚಿಸುವ ವಿಚಾರವಾಗಿದೆ. ಮುಂದಿನ ಪೀಳಿಗೆಗೆ ಮಾಲಿನ್ಯಮುಕ್ತ ಪರಿಸರವನ್ನು ಬಿಟ್ಟು ಹೋಗುವುದು ನಮ್ಮೆಲ್ಲರ ಆದ್ಯ ಕರ್ತವ್ಯ,” ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !