September 10, 2026
Thursday, September 10, 2026
spot_img

ಶೃಂಗೇರಿ ಕ್ಷೇತ್ರ ಅಂಚೆ ಮತಗಳ ಮರುಎಣಿಕೆಯಲ್ಲಿ ಟ್ವಿಸ್ಟ್: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ‘ಸುಪ್ರೀಂ’ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿರುವ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ವಿಚಾರವಾಗಿ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಸುಪ್ರೀಂ ಕೋರ್ಟ್, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ನೀಡಿದೆ.

ಬಿಜೆಪಿ ಅಭ್ಯರ್ಥಿಯ ಡಿ.ಎನ್. ಜೀವರಾಜ್‌ ಅವರ ಗೆಲುವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಟಿ.ಡಿ. ರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತು.

ಈ ವೇಳೆ ಸುಪ್ರೀಂ, ಶಾಸಕರಾಗಿ ಬಿಜೆಪಿ ಜೀವರಾಜ್‌ ಆಯ್ಕೆಯಾಗುವ ನಿಟ್ಟಿನಲ್ಲಿ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿ, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶಿಸಿದೆ. ಜೊತೆಗೆ ಮರು ಮತ ಎಣಿಕೆಯ ದಾಖಲೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿ, ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಇದರಿಂದ ಕಾಂಗ್ರೆಸ್ ನಾಯಕ ಟಿ.ಡಿ.ರಾಜೇಗೌಡ ಅವರೇ ಮತ್ತೆ ಶಾಸಕರಾಗಿ ಮುಂದುವರಿಯಲಿದ್ದಾರೆ.

ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದ ಜೀವರಾಜ್‌
ಈ ಹಿಂದೆ ಬಿಜೆಪಿ ಅಭ್ಯರ್ಥಿ ಜೀವರಾಜ್‌ ಅವರು ಅಂಚೆ ಮತಗಳ ಎಣಿಕೆಯಲ್ಲಿ ಲೋಪವಿದೆ ಎಂದು ಪ್ರಶ್ನಿಸಿ ಹೈಕೋರ್ಟ್ ಮೊರೆ‌ ಹೋಗಿದ್ದರು.‌ ಈ ವೇಳೆ ಮರು ಎಣಿಕೆಗೆ ಹೈಕೋರ್ಟ್ ಆದೇಶ ನೀಡಿತ್ತು. ಮರು ಎಣಿಕೆಯಲ್ಲಿ ಜೀವರಾಜ್‌ ಅವರು ಗೆದ್ದು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !