ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ವಿಜಯ್, ಈಗಾಗಲೇ ಪ್ರಮುಖ ಯೋಜನೆಗಳ ಕುರಿತು ಆದೇಶ ಹೊರಡಿಸಿದ್ದು, ಇದೀಗ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಫ್ಲೆಕ್ಸ್ ಹಾಕದಂತೆ ತಮ್ಮ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಒಂದೇ ವೇಳೆ ಸೂಚನೆ ಉಲ್ಲಂಘಿಸಿದ್ರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟಿವಿಕೆ ಪ್ರಧಾನ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದ್ದು, ರಾಜ್ಯದ ಜನರ ಅಭಿವೃದ್ದಿಗಾಗಿ ತಮಿಳಿಗ ವೆಟ್ರಿ ಕಳಗಂ ಪಕ್ಷವನ್ನು ಸ್ಥಾಪಿಸಲಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ನಾಡಿನ ಜನರಿಗೆ ತೊಂದರೆ ಆಗುವ ರೀತಿಯಲ್ಲಿ ನಡೆದುಕೊಳ್ಳಬಾರದು ಎಂದು ಸೂಚನೆ ನೀಡಿದೆ.
ಪಕ್ಷದ ನಾಯಕರ ಜನ್ಮದಿನಗಳು ಆಗಲಿ, ಯಾವುದೇ ಸಂದರ್ಭದಲ್ಲಿ ರಾಜ್ಯದ ಬೀದಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಟ್ರಾಫಿಕ್ ಜಾಮ್ ಇರುವ ಸ್ಥಳಗಳಲ್ಲಿ ಬ್ಯಾನರ್ಗಳು, ಪೋಸ್ಟರ್ಗಳು ಅಥವಾ ಫ್ಲೆಕ್ಸ್ಗಳನ್ನು ಹಾಕದಂತೆ ಮನವಿ ಮಾಡಲಾಗಿದೆ.
ಒಂದು ವೇಳೆ ಸೂಚನೆ ಉಲ್ಲಂಘಿಸಿ ಜನರಿಗೆ ಸಮಸ್ಯೆ ತಂದಿಟ್ಟರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ತಮಿಳುನಾಡು ಅಭಿವೃದ್ಧಿಯತ್ತ ಸಾಗುತ್ತಿದ್ದು, ಈ ಕ್ಷಣ ಜನರ ಹಿತಾಸಕ್ತಿಗೆ ಹಾನಿ ಮಾಡುವ ಯಾವುದೇ ಕ್ರಮಗಳನ್ನು ಸಹಿಸುವುದಿಲ್ಲ ಎಂದು ತಿಳಿಸಿದೆ.



