ಹೊಸದಿಗಂತ ವರದಿ ವಿಜಯಪುರ:
ಜೋರಾದ ಗಾಳಿಗೆ ಮನೆ ಮೇಲ್ಛಾವಣಿ ಕುಸಿದು ಇಬ್ಬರು ಪುಟ್ಟ ಮಕ್ಕಳು, ಪತಿ, ಪತ್ನಿ ಸೇರಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿಯಾಗಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ಮೋರಟಗಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಇಲ್ಲಿನ ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಗುರುನಾಥ ಬಡಿಗೇರ (28), ಮಕ್ಕಳಾದ ಕಾಳಮ್ಮ (13), ಕೀರ್ತಿ (9) ಮೃತ ದುರ್ಧೈವಿಗಳು. ಗುರುನಾಥ ಬಡಿಗೇರ ಕುಟುಂಬ ತಮ್ಮ ಸ್ವಂತ ಮನೆಯ ದುರಸ್ಥಿ ಮಾಡುವ ಕಾರಣಕ್ಕೆ, ಊರಲ್ಲಿನ ಹಳೆಯ ಮನೆಯಲ್ಲಿ ಬಾಡಿಗೆಯಾಗಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಜೋರಾದ ಗಾಳಿಗೆ ಹಳೇ ಮನೆಯ ಮೇಲ್ಛಾವಣಿ ಕುಸಿದಿದ್ದರಿಂದ ಈ ಅವಘಡ ಸಂಭವಿಸಿದೆ. ನಾಲ್ವರ ಮೃತ ದೇಹವನ್ನು ಹೊರ ತೆಗೆಯಲು ಅಗ್ನಿ ಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಸಿಂದಗಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.



