ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷಕ್ಕೆ ಇನ್ನೂ ತಾರ್ಕಿಕ ಅಂತ್ಯ ಸಿಗದ ಹಿನ್ನೆಲೆ ಹಾರ್ಮುಜ್ ಜಲಸಂಧಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಹಾಗೆಯೇ ಮುಂದುವರಿದಿದ್ದು, ಈ ಬೆನ್ನಲ್ಲೇ ಇರಾನ್ ಸಮಸ್ಯೆಗೆ ಪರಿಹಾರ ಹುಡುಕಲು ಭಾರತದ ನೆರವು ಕೋರಿದೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ, ನಾನು ಭಾರತದ ಪ್ರಧಾನಿ ಮೋದಿ ಅವರೊಂದಿಗೆ ಮತ್ತು ಜೈಶಂಕರ್ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದೇನೆ. ಹಾರ್ಮುಜ್ ಜಲಸಂಧಿ ಮತ್ತು ಮಧ್ಯಪ್ರಾಚ್ಯದ ಕುರಿತು ಭಾರತ ಮತ್ತು ಇರಾನ್ ಒಂದೇ ರೀತಿಯ ಕಾಳಜಿಯನ್ನು ಹೊಂದಿವೆ. ಇಲ್ಲಿ ಶಾಂತಿ ಸ್ಥಾಪನೆಗಾಗಿ ಭಾರತವು ತೆಗೆದುಕೊಳ್ಳುವ ಎಲ್ಲಾ ನಿರ್ದಾರಗಳಿಗೂ ನಾವು ಸ್ವಾಗತಿಸುತ್ತೇವೆ ಎಂದು ತಿಳಿಸಿದರು.
ಇದೇ ವೇಳೆ ಹಾರ್ಮುಜ್ ಜಲಸಂಧಿಯಲ್ಲಿ ಎಲ್ಲಾ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಇರಾನ್ ಸಹಾಯ ಮಾಡಲು ಸಿದ್ಧವಿದೆ ಎಂದು ತಿಳಿಸುವ ಮೂಲಕ ಜಾಗತಿಕ ಮಾರುಕಟ್ಟೆಗೆ ಭರವಸೆಯ ಸಂದೇಶ ನೀಡಿದರು.
ಅಮೆರಿಕ ಮತ್ತು ಇರಾನ್ ನಡುವಿನ ಸಂಬಂಧದ ಕುರಿತು ಮಾತನಾಡಿದ ಅರಾಘ್ಚಿ, ಯಾವುದೇ ಕಾರಣಕ್ಕೂ ನಮಗೆ ಅಮೆರಿಕದ ಮೇಲೆ ನಂಬಿಕೆಯಿಲ್ಲ. ಆದರೆ, ಇರಾನ್ ಅನ್ನು ನಂಬಲು ಅಮೆರಿಕಕ್ಕೆ ಎಲ್ಲಾ ಕಾರಣಗಳಿವೆ. ನಾವು ಕದನ ವಿರಾಮವನ್ನು ಕಾಯ್ದುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.



