ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಬಾರಿ ಚರ್ಚೆಗಳು ನಡೆಯುತ್ತಿದ್ದು, ಇದರ ನಡುವೆ ಮಧುಗಿರಿ ಶಾಸಕ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಸಂಚಲನ ಮೂಡಿಸಿದೆ.
ಗೃಹ ಸಚಿವ ಪರ ಬ್ಯಾಟಿಂಗ್
ಗೃಹ ಸಚಿವ ಜಿ. ಪರಮೇಶ್ವರ್ ಅವರ ಪರವಾಗಿ ಬಹಿರಂಗವಾಗಿಯೇ ಬ್ಯಾಟ್ ಬೀಸಿದ ರಾಜಣ್ಣ, ಸಿದ್ದರಾಮಯ್ಯ ಬಳಿಕ ಆ ಸ್ಥಾನಕ್ಕೆ ಜಿ. ಪರಮೇಶ್ವರ್ ಅವರೇ ಸೂಕ್ತ ವ್ಯಕ್ತಿ ಎಂದು ಹೇಳಿದರು.
ಸಿಎಂ ಸ್ಥಾನ ಯಾರ ಆಸ್ತಿಯೂ ಅಲ್ಲ
ಮಧುಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎನ್. ರಾಜಣ್ಣ, ಸಿಎಂ ಸ್ಥಾನ ಎಂಬುದು ಸಿದ್ದರಾಮಯ್ಯ ಅವರ ಮನೆ ಆಸ್ತಿಯಲ್ಲ ಮತ್ತು ಯಾವ ರಾಜಕಾರಣಿಗಳ ಸ್ವಂತ ಆಸ್ತಿಯೂ ಅಲ್ಲ. ಒಂದು ವೇಳೆ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆಯಾಗುವುದಾದರೆ, ಪರಮೇಶ್ವರ್ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ತಿಳಿಸಿದರು.
ಸಾಧನಾ ಸಮಾವೇಶ ಆಯೋಜನೆ ಕುರಿತು ಪ್ರತಿಕ್ರಿಯಿಸಿದ ರಾಜಣ್ಣ, ಪರಮೇಶ್ವರ್ ಅವರು ಮುಖ್ಯಮಂತ್ರಿಯಾಗಲಿ ಎಂದು ನಾವು ಬಯಸುತ್ತೇವೆ. ಇದಕ್ಕಾಗಿ ಒಂದು ಬಣ ಈಗಾಗಲೇ ಸದ್ದಿಲ್ಲದೆ ಸಿದ್ಧತೆ ನಡೆಸುತ್ತಿದೆ ಎಂದು ಪರೋಕ್ಷವಾಗಿ ಹೇಳಿದರು.
ಸಿಎಂ ಸ್ಥಾನಕ್ಕೆ ಪೈಪೋಟಿ
ಇತ್ತ ಕೆ.ಎನ್. ರಾಜಣ್ಣ ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದೊಳಗೆ ತೀವ್ರ ಸಂಚಲನ ಸೃಷ್ಟಿಸಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಸಿಎಂ ಸ್ಥಾನದ ಪೈಪೋಟಿಯ ನಡುವೆ ಮೂರನೇ ವ್ಯಕ್ತಿಯ ಹೆಸರು ಎಂಟ್ರಿಕೊಟ್ಟಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ಪಡೆದುಕೊಳ್ಳಲಿದೆ.



