ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಮುಜಫ್ಫರ್ಪುರ ಭಾಗದಲ್ಲಿ ಸೋಮವಾರ ಆತಂಕಕಾರಿ ಘಟನೆ ನಡೆದಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ ಮೂರು ರೈಲುಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಹಲವು ಕೋಚ್ಗಳ ಕಿಟಕಿ ಗಾಜುಗಳು ಜಖಂಗೊಂಡಿವೆ. ಘಟನೆಯಿಂದ ಪ್ರಯಾಣಿಕರಲ್ಲಿ ಕೆಲಕಾಲ ಭಯದ ವಾತಾವರಣ ನಿರ್ಮಾಣವಾಗಿತ್ತು.
ವಂದೇ ಭಾರತ್ ಕೋಚ್ಗಳಿಗೆ ಹಾನಿ
ಪಾಟ್ಲಿಪುತ್ರ-ಗೋರಖ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್ ಮಜೌಲಿಯ ಮತ್ತು ಖಬ್ರಾ ಪ್ರದೇಶಗಳ ಮಧ್ಯೆ ಸಂಚರಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ರೈಲಿನ ಮೂರು ಕೋಚ್ಗಳ ಕಿಟಕಿ ಗಾಜುಗಳು ಭಾಗಶಃ ಹಾನಿಗೊಳಗಾಗಿವೆ. ಪ್ರಯಾಣಿಕರು ತಕ್ಷಣವೇ ರೈಲ್ವೇ ಅಧಿಕಾರಿಗಳು ಹಾಗೂ ಆರ್ಪಿಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
ಇನ್ನೆರಡು ರೈಲುಗಳ ಮೇಲೂ ದಾಳಿ
ವಂದೇ ಭಾರತ್ ಬಳಿಕ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪಾಟ್ನಾ-ಜಯನಗರ್ ಇಂಟರ್ಸಿಟಿ ಎಕ್ಸ್ಪ್ರೆಸ್ ಹಾಗೂ ಲಿಚ್ಛವಿ ಎಕ್ಸ್ಪ್ರೆಸ್ ರೈಲುಗಳ ಮೇಲೂ ಕಲ್ಲು ತೂರಾಟ ನಡೆದಿದೆ. ಈ ಘಟನೆಗಳಲ್ಲಿ ಹಲವು ಕಿಟಕಿ ಗಾಜುಗಳು ಪುಡಿಯಾಗಿದ್ದು, ಪ್ರಯಾಣಿಕರು ಆತಂಕಕ್ಕೆ ಒಳಗಾದರು. ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಆರಂಭಿಸಿದ್ದಾರೆ.



