ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ದೆಹಲಿಯಲ್ಲಿ ಇಂಧನ ದರ ಏರಿಕೆ ಹಿನ್ನೆಲೆ ಟ್ಯಾಕ್ಸಿ ಹಾಗೂ ಆಟೋ ಚಾಲಕರ ಸಂಘಟನೆಗಳು ಮೂರು ದಿನಗಳ ಮುಷ್ಕರಕ್ಕೆ ಕರೆ ನೀಡಿವೆ.
ಮೇ 21ರಿಂದ 23ರವರೆಗೆ ನಡೆಯಲಿರುವ ಈ ಪ್ರತಿಭಟನೆ ಸಾರ್ವಜನಿಕ ಸಂಚಾರದ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ. ಪ್ರಯಾಣ ದರ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಚಾಲಕರ ಒಕ್ಕೂಟಗಳು ಈ ಕಠಿಣ ನಿಲುವು ತಾಳಿವೆ.
ಏರಿದ ಇಂಧನ ದರ, ಸಂಕಷ್ಟದಲ್ಲಿರುವ ಚಾಲಕರು
ಪೆಟ್ರೋಲ್, ಡೀಸಲ್ ಮತ್ತು ಸಿಎನ್ಜಿ ದರಗಳು ನಿರಂತರ ಏರಿಕೆಯಾಗುತ್ತಿರುವುದರಿಂದ ಮಧ್ಯಮ ವರ್ಗದ ಚಾಲಕರು ಜೀವನ ನಡೆಸಲು ಕಷ್ಟಪಡುತ್ತಿದ್ದಾರೆ ಎಂದು ಸಂಘಟನೆಗಳು ಹೇಳಿವೆ. ಇಂಧನ ಬೆಲೆ ಏರಿಕೆಗೆ ಅನುಗುಣವಾಗಿ ಪ್ರಯಾಣ ದರ ಪರಿಷ್ಕರಣೆ ಅಗತ್ಯವಾಗಿದೆ ಎಂದು ಒತ್ತಾಯಿಸಲಾಗಿದೆ.
ಇದನ್ನೂ ಓದಿ:
ಮೂರು ದಿನ ವಾಹನ ಸಂಚಾರ ಸ್ಥಗಿತ ಸಾಧ್ಯತೆ
ಚಾಲಕ್ ಶಕ್ತಿ ಯೂನಿಯನ್ ಸೇರಿದಂತೆ ಹಲವು ಸಂಘಟನೆಗಳು ಮೇ 21, 22 ಮತ್ತು 23ರಂದು ವಾಹನ ಚಲಾಯಿಸದಂತೆ ಕರೆ ನೀಡಿವೆ. ಈ ಕುರಿತು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.
ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ
ಒಂದು ವೇಳೆ ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದ ಮುಷ್ಕರ ನಡೆಸಲಾಗುತ್ತದೆ ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ. ಇದರಿಂದ ರಾಜಧಾನಿಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ತೀವ್ರ ಹೊಡೆತ ಬೀಳುವ ಸಾಧ್ಯತೆ ಇದೆ.



