ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ನ್ಯಾಯಾಲಯದಲ್ಲಿ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಗೆ ಹಿನ್ನೆಡೆಯಾಗಿದ್ದು, ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಚಿಕ್ಕಪ್ಪನ 40 ದಿನಗಳ ಮರಣೋತ್ತರ ಆಚರಣೆ ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾದ ತನ್ನ ತಾಯಿಯನ್ನು ನೋಡಿಕೊಳ್ಳಲು 15 ದಿನಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಉಮರ್ ಖಾಲಿದ್ ಅರ್ಜಿ ಸಲ್ಲಿಸಿದ್ದರು.
ಖಾಲಿದ್ ಹೇಳಿಕೆ ಅಸಮಂಜಸ ಎಂದ ಕೋರ್ಟ್
ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ ಬಾಜ್ಪಾಯಿ ಅವರು, ಉಮರ್ ಖಾಲಿದ್ ಹೇಳಿರುವ ಕಾರಣ ಅಸಮಂಜಸ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಈಶಾನ್ಯ ದೆಹಲಿಯಲ್ಲಿ 2020 ರ ಗಲಭೆಯ ಪ್ರಮುಖ ಆರೋಪಿ ಎಂದು ಗುರುತಿಸಿ ಖಾಲಿದ್ ಮತ್ತು ಇತರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ), ಭಯೋತ್ಪಾದನಾ ವಿರೋಧಿ ಕಾನೂನು ಹಾಗೂ ಭಾರತೀಯ ದಂಡ ಸಂಹಿತೆಯ(ಐಪಿಸಿ) ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.



