ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ರೈತರಲ್ಲಿ ತೀವ್ರ ಭೀತಿ ಮೂಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಗ್ರಾಮದ ಕೃಷಿ ಜಮೀನುಗಳಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದ ಚಿರತೆಯಿಂದಾಗಿ ಸ್ಥಳೀಯರು ಹೊಲಗದ್ದೆಗಳಿಗೆ ತೆರಳಲು ಭಯಪಡುವ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯನ್ನು ತಕ್ಷಣವೇ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಸಾರ್ವಜನಿಕರ ಆಗ್ರಹಕ್ಕೆ ಸ್ಪಂದಿಸಿದ ಅಧಿಕಾರಿಗಳು, ಚಿರತೆ ಓಡಾಡುವ ಜಾಗದಲ್ಲಿ ನಾಯಿಯನ್ನು ಆಮಿಷವಾಗಿಟ್ಟು ಬೋನು ಅಳವಡಿಸಿದ್ದರು.
ಕಳೆದ ರಾತ್ರಿ ನಾಯಿಯ ಬೇಟೆಗೆ ಬಂದ ಚಿರತೆ ಅರಣ್ಯ ಇಲಾಖೆಯ ಬೋನಿನೊಳಗೆ ಸಿಲುಕಿಕೊಂಡಿದೆ. ಚಿರತೆ ಸೆರೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಹಳ್ಳಿಗಳ ನೂರಾರು ಜನರು ಅದನ್ನು ನೋಡಲು ಸ್ಥಳದಲ್ಲಿ ಜಮಾಯಿಸಿದ್ದರು. ಪ್ರಸ್ತುತ ಸೆರೆಸಿಕ್ಕಿರುವ ಚಿರತೆಯನ್ನು ಸುರಕ್ಷಿತವಾಗಿ ದಟ್ಟ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ.



