ಹೊಸದಿಗಂತ ಬೆಳಗಾವಿ:
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿವಾದಾತ್ಮಕ ಫೋಟೋ ಪ್ರಕರಣದ ಮುಖ್ಯ ಆರೋಪಿ, ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಕೊನೆಗೂ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಈತನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಹಲವಾರು ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ವಿಲ್ಸನ್ ಗಾರ್ಡನ್ ನಾಗರಾಜ್ ಅಲಿಯಾಸ್ ನಾಗನನ್ನು ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ, ನಟ ದರ್ಶನ್ ಜೊತೆ ಕುಳಿತು ಟೀ ಹಾಗೂ ಸಿಗರೇಟ್ ಸೇವಿಸುತ್ತಿದ್ದ ಈತನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ತೀವ್ರ ಸ್ವರೂಪದ ವಿವಾದ ಸೃಷ್ಟಿಸಿತ್ತು.
ಜೈಲು ನಿಯಮ ಉಲ್ಲಂಘನೆಯ ಈ ಗಂಭೀರ ಪ್ರಕರಣದ ಬೆನ್ನಲ್ಲೇ, ಆಡಳಿತಾತ್ಮಕ ಹಿತದೃಷ್ಟಿಯಿಂದ ನಾಗನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಸದ್ಯ ಕಾನೂನು ಹೋರಾಟದ ಬಳಿಕ ಹೈಕೋರ್ಟ್ನಿಂದ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿರುವ ಈತ ಜೈಲಿನಿಂದ ಹೊರಬಂದಿದ್ದಾನೆ.



