ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್ರಚನೆ ಮತ್ತು ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ಗರಿಗೆದರಿರುವ ಸಂದರ್ಭದಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ.
ತಮ್ಮ ಖಾತೆ ಬದಲಾವಣೆ ಬಗ್ಗೆ ಯಾವುದೇ ಬೇಸರ ಇಲ್ಲ ಎಂದು ಹೇಳಿರುವ ಅವರು, ಪಕ್ಷ ನೀಡುವ ಯಾವ ಜವಾಬ್ದಾರಿಯನ್ನಾದರೂ ನಿಭಾಯಿಸುವ ಸಾಮರ್ಥ್ಯ ನನ್ನಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆ ಚುನಾವಣೆ-ಸಚಿವ ಸಂಪುಟಕ್ಕೆ ಲಿಂಕ್ ಇಲ್ಲ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಹಾಗೂ ಸಚಿವ ಸಂಪುಟ ಪುನರ್ರಚನೆ ಎರಡೂ ಬೇರೆ ಬೇರೆ ಪ್ರಕ್ರಿಯೆಗಳು ಎಂದು ಹೇಳಿದರು. ಈ ವಿಚಾರಗಳನ್ನು ಒಂದಕ್ಕೊಂದು ಜೋಡಿಸಿ ಅನಗತ್ಯ ಊಹಾಪೋಹ ಸೃಷ್ಟಿಸಬಾರದು ಎಂದರು.
ಇದನ್ನೂ ಓದಿ:
ಸಚಿವ ಸ್ಥಾನ ಬೇಡಿಕೆ ಸಹಜ
ಹಿರಿಯ ಶಾಸಕರು ಸಚಿವ ಸ್ಥಾನ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಹಲವು ಬಾರಿ ಗೆದ್ದಿರುವ ಶಾಸಕರು ಅವಕಾಶ ಕೇಳುವುದು ಸಹಜ ಎಂದು ಹೇಳಿದರು. ಆದರೆ ಸಚಿವ ಸಂಪುಟದಲ್ಲಿ ಸದಸ್ಯರ ಸಂಖ್ಯೆಗೆ ಮಿತಿ ಇರುವ ಕಾರಣ ಎಲ್ಲರಿಗೂ ಅವಕಾಶ ಸಿಗುವುದಿಲ್ಲ ಎಂದು ತಿಳಿಸಿದರು.
‘ಯಾವ ಖಾತೆ ಕೊಟ್ಟರೂ ಕೆಲಸ ಮಾಡ್ತೇನೆ’
ಗೃಹ ಇಲಾಖೆಯನ್ನು ಹಲವು ವರ್ಷಗಳಿಂದ ಸಮರ್ಥವಾಗಿ ನಿರ್ವಹಿಸಿದ್ದೇನೆ. ಯಾವ ಖಾತೆ ಕೊಟ್ಟರೂ ಜವಾಬ್ದಾರಿಯಿಂದ ಕೆಲಸ ಮಾಡುತ್ತೇನೆ ಎಂದು ಪರಮೇಶ್ವರ್ ಹೇಳಿದರು. ಇನ್ನೂ ದೊಡ್ಡ ಜವಾಬ್ದಾರಿಯನ್ನೂ ನಿಭಾಯಿಸುವ ಆತ್ಮವಿಶ್ವಾಸ ಇದೆ ಎಂದು ಅವರು ಹೇಳಿದರು.



